ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಯನ್ನು ಇನ್ನೂ 10 ದಿನಗಳಲ್ಲಿ ಘೋಷಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿರುವುದಾಗಿ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷರೂ ಆದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುರುವಾರ ಹೇಳಿದ ನಂತರ ಈ ವಿಚಾರವಾಗಿ ಕೆಲವು ತಿಂಗಳುಗಳಿಂದ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಯನ್ನು ಇನ್ನೂ 10 ದಿನಗಳಲ್ಲಿ ಘೋಷಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿರುವುದಾಗಿ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷರೂ ಆದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುರುವಾರ ಹೇಳಿದ ನಂತರ ಈ ವಿಚಾರವಾಗಿ ಕೆಲವು ತಿಂಗಳುಗಳಿಂದ ನಡೆಸಲಾಗುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಮೀಸಲಾತಿ ವಿಚಾರವಾಗಿ ಸಿಎಂ ಬೊಮ್ಮಾಯಿ ಜೊತೆಗೆ ಚರ್ಚಿಸಿದ ನಂತರ ಪಂಚಮಸಾಲಿ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಯತ್ನಾಳ, ಸಮುದಾಯದ ಇತರೆ ಮುಖಂಡರೊಂದಿಗೆ ಮುಖ್ಯಮಂತ್ರಿ ಜೊತೆಗೆ ವಿಸ್ಕೃತವಾಗಿ ಚರ್ಚೆ ನಡೆಸಲಾಗಿದ್ದು, ಅಗತ್ಯ ಕಾನೂನಾತ್ಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಡಿಸೆಂಬರ್ 29ರೊಳಗೆ ಮೀಸಲಾತಿ ಘೋಷಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಮೀಸಲಾತಿಗಾಗಿ ಆಗ್ರಹಿಸಿ ಬಸವರಾಜ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿಗರು ಪ್ರತಿಭಟನೆ ನಡೆಸುತ್ತಿದ್ದರು. ಡಿಸೆಂಬರ್ 19ರೊಳಗೆ ಮೀಸಲಾತಿ ಪ್ರಕಟಿಸುವುದಾಗಿ ಸಿಎಂ ಬೊಮ್ಮಾಯಿ ಈ ವರ್ಷದ ಆರಂಭದಲ್ಲಿ ಭರವಸೆ ನೀಡಿದ್ದರು. ಆದರೆ, ಗಡುವು ಮುಗಿದರೂ ಮೀಸಲಾತಿ ಪ್ರಕಟಿಸಿರಲಿಲ್ಲ. ಇದರಿಂದ ಸರ್ಕಾರದ ಮೇಲೆ ಒತ್ತಡ ಹೇರಲು ಬೆಳಗಾವಿಯಲ್ಲಿ ಸದ್ಯ ನಡೆಯುತ್ತಿರುವ ಅಧಿವೇಶನ ಸಂದರ್ಭದಲ್ಲಿ ಬೃಹತ್ ಸಮಾವೇಶ ನಡೆಸಲು ಪಂಚಮಸಾಲಿಗರು ಯೋಜನೆ ಹಾಕಿಕೊಂಡಿದ್ಗರು. ಸ್ವಾಮೀಜಿ ಡಿಸೆಂಬರ್ 22 ಕ್ಕೆ ಹೊಸ ಡೆಡ್ ಲೈನ್ ನೀಡಿದ್ದರು ಅಲ್ಲದೇ, ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.
ಬೆಳಗಾವಿಯಿಂದ 100 ಕಿ.ಮೀ ದೂರದಲ್ಲಿರುವ ಬಸ್ತಾವಾಡ್ ಗ್ರಾಮದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಹಸ್ರಾರು ಮಂದಿ ಗುರುವಾರ ಜಮಾಯಿಸಿದ್ದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಸಿಎಂ ಬೊಮ್ಮಾಯಿ, ಈ ವಿಚಾರದ ಬಗ್ಗೆ ಚರ್ಚಿಸಲು ಪಂಚಮಸಾಲಿ ಮುಖಂಡರನ್ನು ಸುವರ್ಣಸೌಧಕ್ಕೆ ಆಹ್ವಾನಿಸಿ ಮಾತುಕತೆ ನಡೆಸಿದರು.