ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಚಿವ ಆಕಾಂಕ್ಷಿಗಳು ಸಂಪುಟ ವಿಸ್ತರಣೆಗೆ ಕಾತೂರರಾಗಿದ್ದಾರೆ. ಇನ್ನು ಸಂಪುಟ ವಿಸ್ತರಣೆಯನ್ನು ಕಳೆದ ಕೆಲವು ತಿಂಗಳಿನಿಂದ ಮುಂದೂಡಿಗೊಂಡು ಬರಲಾಗುತ್ತಿತ್ತು. ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಗುಜರಾತ್ ವಿಧಾನಸಭಾ ಚುನಾವಣೆ (Gujurat Election) ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಶಿವಮೊಗ್ಗ (Shivamogga) ದಲ್ಲಿ ಹೇಳಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗುಜರಾತ್ ವಿಧಾನಸಭಾ ಚುನಾವಣೆ ನಂತರ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು. ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ರಚನೆಯಾದ ಬಳಿಕ ಈವರೆಗೆ ಒಂದು ಬಾರಿಯೂ ಸಂಪುಟ ವಿಸ್ತರಣೆಯೂ ಆಗಿಲ್ಲ, ಪುನಾರಚನೆಯೂ ಆಗಿಲ್ಲ. ಈ ನಿಟ್ಟಿನಲ್ಲಿ ಕೆಲ ಪ್ರಯತ್ನಗಳಾದರೂ ವರಿಷ್ಠರಿಂದ ನಿರೀಕ್ಷಿತ ಸ್ಪಂದನೆ ಸಿಗದ ಕಾರಣಕ್ಕೆ ಸಂಪುಟ ಸರ್ಜರಿ ವಿಚಾರ ನೆನೆಗುದಿಗೆ ಬಿದ್ದಿತ್ತು. ಈಗ ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಬೊಮ್ಮಾಯಿ ಸರ್ಕಾರದ ಸಂಪುಟದಲ್ಲಿ ಸ್ಥಾನ ಪಡೆಯಲು ಆಕಾಂಕ್ಷಿಗಳ ಪಟ್ಟಿಯೇ ಇದೆ.
40 ಪರ್ಸೆಂಟ್ ಕಮೀಷನ್ ಆರೋಪದಲ್ಲಿ ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ಸಚಿವ ಸ್ಥಾನ ಕಳೆದುಕೊಂಡಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರ ಆಪ್ತ, ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕೂಡ ಸಚಿವ ಆಕಾಂಕ್ಷಿಗಳಾಗಿದ್ದಾರೆ. ಈ ಬಗ್ಗೆ ಮುಕ್ತವಾಗಿಯೇ ಹೇಳಿಕೊಂಡಿದ್ದರು. ಇನ್ನೂ ಸಿಡಿ ಪ್ರಕರಣದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಸಾಹುಕಾರ್ ರಮೇಶ ಜಾರಕಿಹೊಳಿ ಕೂಡ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ