ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಗೆಳೆಯನ ಮನೆಯಿಂದ ಬೇರೊಂದು ಕಟ್ಟಡಕ್ಕೆ ಜಿಗಿಯುವ ವೇಳೆ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಗೆಳೆಯನ ಮನೆಯಿಂದ ಬೇರೊಂದು ಕಟ್ಟಡಕ್ಕೆ ಜಿಗಿಯುವ ವೇಳೆ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಚಂದ್ರಕಾಂತ್ ಪಾತ್ರಾ (37) ಎಂದು ಗುರುತಿಸಲಾಗಿದ್ದು, ಇವರು ಬ್ಯಾಗ್ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಪಾತ್ರಾ ಮತ್ತು ತನ್ನ ಸ್ನೇಹಿತರೊಂದಿಗೆ ಕೊಟ್ಟಿಗೆಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಮೃತ ವ್ಯಕ್ತಿ ಕಟ್ಟಡದ ಮೂರನೇ ಮಹಡಿಯಲ್ಲಿ ನೆಲೆಸಿದ್ದ. ಈ ಕಟ್ಟಡದ ಪಕ್ಕದ ಕಟ್ಟಡದಲ್ಲಿ ಸ್ನೇಹಿತರು ನೆಲೆಸಿದ್ದರು. ನಾಲ್ಕು ಅಂತಸ್ತಿನ ಕಟ್ಟಡ ಇಳಿದು ಹತ್ತುವ ಬದಲು ಪಾತ್ರಾ ಅಡುಗೆ ಮನೆಯ ಕಿಟಿಕಿ ಮೂಲಕ ಎರಡು ಅಂತರದಲ್ಲಿದ್ದ ಸ್ನೇಹಿತರ ಕಟ್ಟಡದ ಟೆರೇಸ್’ಗೆ ಹೋಗಿ ಬರುತ್ತಿದ್ದ ಎಂದು ತಿಳಿದುಬಂದಿದೆ.
ಸ್ನೇಹಿತರು ಶನಿವಾರ ತಡರಾತ್ರಿ 1.30ರ ಸುಮಾರಿಗೆ ಕಟ್ಟಡದ ಟೆರೇಸ್ ಮೇಲೆ ಹೊಸ ವರ್ಷಾಚರಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಪಾತ್ರ ಕಂಠಪೂರ್ತಿ ಮದ್ಯ ಸೇವನೆ ಮಾಡಿದ್ದು, ಮನೆಗೆ ಹೋಗುತ್ತೇನೆಂದು ಹೇಳಿ ಕಟ್ಟಡದಿಂದ ಜಿಗಿದಿದ್ದಾನೆ. ಈ ವೇಳೆ ನಶೆಯಲ್ಲಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಕೂಡಲೇ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.