2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಮತ್ತು ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ ಎಂಬ ಘೋಷಣೆ ಗುರುವಾರ ಇಲ್ಲಿ ಆರಂಭವಾದ ಮೂರು ದಿನಗಳ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಪ್ರತಿಧ್ವನಿಸಿತು. ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಮತ್ತು ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ ಎಂಬ ಘೋಷಣೆ ಗುರುವಾರ ಇಲ್ಲಿ ಆರಂಭವಾದ ಮೂರು ದಿನಗಳ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಪ್ರತಿಧ್ವನಿಸಿತು.
ಕೇಂದ್ರದ ಮಾಜಿ ಸಚಿವ ಅಜಯ್ ಮಾಕನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತು ಇತರ ಮುಖಂಡರು ಭಾಷಣ ಮಾಡಲು ಮುಂದಾದಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಈ ಘೋಷಣೆ ಕೂಗಿದರು.
ಲೋಕಸಭೆ ಚುನಾವಣೆಗೆ ಸುಮಾರು ಏಳು ತಿಂಗಳು ಬಾಕಿ ಉಳಿದಿದ್ದು, ಪಕ್ಷವು ತನ್ನ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಹುರಿದುಂಬಿಸಲು ಶ್ರಮಿಸುತ್ತಿದೆ.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ಬಿಜೆಪಿ ನೇತೃತ್ವದ ಕೇಂದ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ (ಎನ್ಡಿಎ) ಸರ್ಕಾರದ ಭ್ರಷ್ಟಾಚಾರ, ನಿರುದ್ಯೋಗ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಹೋರಾಡುವ ಮೂಲಕ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಮನವಿ ಮಾಡಿದರು.
ಅಜಯ್ ಮಾಕನ್ ಮತ್ತು ಸಲೀಂ ಅಹಮದ್ ಮಾತನಾಡಿ, ‘ಯುವಜನರ ಸಬಲೀಕರಣ ಮತ್ತು ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕಾಂಗ್ರೆಸ್ ಪಕ್ಷ ಶ್ರಮಿಸುತ್ತಿದೆ. ಯುವಕರಿಂದ ಮಾತ್ರ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ’ ಎಂದರು.
ಸಲೀಂ ಅಹಮದ್ ಮಾತನಾಡಿ, ‘ದೇಶದ ಅತಿದೊಡ್ಡ ಹಾಗೂ ಬಲಿಷ್ಠ ಯುವ ಸಂಘಟನೆಯಾದ ಯುವ ಕಾಂಗ್ರೆಸ್ ಪಕ್ಷದ ಅಡಿಪಾಯವಾಗಿದೆ. ದೇಶದ ಐಕ್ಯತೆ ಮತ್ತು ಸಮಗ್ರತೆಗಾಗಿ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧಿ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ತತ್ವ, ಸಿದ್ಧಾಂತಗಳನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ತಲುಪಿಸಬೇಕು. ಭಾರತದ ಮಾಹಿತಿ ತಂತ್ರಜ್ಞಾನ ಮತ್ತು ದೂರಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ರಾಜೀವ್ ಗಾಂಧಿ 18 ವರ್ಷ ವಯಸ್ಸಿನವರಿಗೆ ಮತದಾನದ ಹಕ್ಕನ್ನು ನೀಡಿದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಅವರ ಸಾಧನೆಗಳನ್ನು ಜನರಲ್ಲಿ ಹರಡಬೇಕು. ‘ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ’ ಎಂದು ಹೇಳಿದರು.
ಕೇಂದ್ರ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಮೇ 10ರ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ನೀಡಿದ್ದ ತನ್ನೆಲ್ಲಾ ಭರವಸೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗಗಳ ಕಲ್ಯಾಣಕ್ಕೆ ಬದ್ಧವಾಗಿದೆ. ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಗೆಲುವಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪಾತ್ರಕ್ಕಾಗಿ ಮುಖಂಡರು ಶ್ಲಾಘಿಸಿದರು.