ಬೆಂಗಳೂರು: ರಾಜ್ಯದಲ್ಲಿ ಡಯಾಲಿಸಿಸ್, ಮಧುಮೇಹ ನಿಯಂತ್ರಣ ಕೇಂದ್ರಗಳು ಹಾಗೂ ಮದ್ರಸಾ ಮತ್ತು ಉರ್ದು ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೆಚ್ಚಿನ ನೆರವು ಒದಗಿಸುವಂತೆ ಅಝೀಂ ಪ್ರೇಮ್ ಜಿ ಫೌಂಡೇಶನ್ ನ ಯೋಜನಾ ವ್ಯವಸ್ಥಾಪಕ ಶೇಕ್ ಜಿನ್ನಾ ಜೊತೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಂ ಕೋರಿದರು.
ಗುರುವಾರ ನಗರದ ಶೇಷಾದ್ರಿಪುರದಲ್ಲಿರುವ ಕೆಎಂಡಿಸಿ ಭವನದಲ್ಲಿನ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ, ಶಿಕ್ಷಣದ ಜೊತೆಗೆ ಬೆಂಗಳೂರು ನಗರದ ಕೊಳಚೆ ಪ್ರದೇಶಗಳಲ್ಲಿನ ಯುವಕರು ಮಾದಕ ವ್ಯಸನಿಗಳಾಗುತ್ತಿರುವುದನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲೂ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಸಲ್ಮಾ ಫಿರ್ದೋಸ್, ರಿಜಿಸ್ಟ್ರಾರ್ ಮಾಝುದ್ದೀನ್ ಖಾನ್, ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಝಫಾರಿ ಉಪಸ್ಥಿತರಿದ್ದರು.