Home Uncategorized ಅರಣ್ಯ ಸಚಿವರ ಆದೇಶ ಜಾರಿ: ಒಂದೇ ದಿನದಲ್ಲಿ 60ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಒತ್ತುವರಿ...

ಅರಣ್ಯ ಸಚಿವರ ಆದೇಶ ಜಾರಿ: ಒಂದೇ ದಿನದಲ್ಲಿ 60ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವು

52
0

ಬೆಂಗಳೂರು: ‘ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ 24 ಗಂಟೆಯೊಳಗೆ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಅರಣ್ಯದ ಬಿಎಂ ಕಾವಲು ಬಫರ್ ವಲಯದಲ್ಲಿ ಒತ್ತುವರಿ ಮಾಡಲಾಗಿದ್ದ 60ಕೋಟಿ ರೂ. ಮೌಲ್ಯದ 6.5ಎಕರೆ ಭೂಮಿ ತೆರವು ಮಾಡಿ, ವಶಕ್ಕೆ ಪಡೆಯಲಾಗಿದೆ.

ಹೊಸವರ್ಷದಲ್ಲಿ ಅರಣ್ಯ ಇಲಾಖೆಯ ಕಾರ್ಯ ಯೋಜನೆಗಳ ಬಗ್ಗೆ ನಿನ್ನೆ ಸಭೆ ನಡೆಸಿ ಉನ್ನತಾಧಿಕಾರಿಗಳಿಗೆ ಆದ್ಯತೆಯ ಮೇಲೆ ಒತ್ತುವರಿ ತೆರವು ಮಾಡಲು ಸಚಿವರು ಸೂಚಿಸಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯೇ ಬಿಎಂ ಕಾವಲಿನಲ್ಲಿ ಜೆಸಿಬಿ ವಾಹನಗಳು ಗರ್ಜಿಸಿದವು. ಬೆಂಗಳೂರು ನಗರ ಡಿಸಿಎಫ್, ರವೀಂದ್ರಕುಮಾರ್, ಎಸಿಎಫ್ ಸುರೇಶ್ ಮತ್ತು ಆರ್ ಎಫ್‍ಓ ಗೋವಿಂದರಾಜ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಯ ತಂಡ ತೆರವು ಕಾರ್ಯಾಚರಣೆಗಿಳಿದು ಈ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿ, ಭೂಮಿ ವಶಕ್ಕೆ ಪಡೆದು ಗಡಿಯಲ್ಲಿ ಬಿದಿರು ಸೇರಿದಂತೆ ನಾನಾ ಜಾತಿಯ ಮರಗಳನ್ನು ನೆಡುವ ಮೂಲಕ ಮರುವಶಕ್ಕೆ ಪಡೆದರು.

ಈ ಅರಣ್ಯ ಪ್ರದೇಶದಲ್ಲಿ ಸುಮಾರು 6.5ಎಕರೆಯಷ್ಟು ಭೂಮಿಯನ್ನು ಮಧುಸೂದನಾನಂದ ಸ್ವಾಮಿ ಎಂಬುವವರು ಒತ್ತುವರಿ ಮಾಡಿ, ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಅರಣ್ಯ ಭೂಮಿಯಾದ ಕಾರಣ ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ ಇಲಾಖೆ ತಿರಸ್ಕರಿಸಿತ್ತು.

ಒತ್ತುವರಿದಾರರ ಬಳಿ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಯಾವುದೇ ಕಂದಾಯ ದಾಖಲೆ, ಕ್ರಯಪತ್ರ, ಮಂಜೂರಾತಿ ಪತ್ರ, ಸಾಗುವಳಿ ಚೀಟಿ ಯಾವುದೂ ಇಲ್ಲದ ಕಾರಣ 2017ರ ಆಗಸ್ಟ್ ನಲ್ಲಿಯೇ ಈ ಒತ್ತುವರಿ ತೆರವಿಗೆ ಎಸಿಎಫ್ ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಿಸಿಎಫ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.

2023ರ ಡಿ.29ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜ್, ಈ ಭೂಮಿ ಅರಣ್ಯ ಇಲಾಖೆಗೆ ಸಂಬಂಧಿಸಿದ್ದೆಂದು ಮಹತ್ವದ ಆದೇಶ ನೀಡಿದ್ದರು. ನಿನ್ನೆ ಅರಣ್ಯ ಸಚಿವ ಈಶ್ವರ ಖಂಡ್ರೆ, ಬೆಂಗಳೂರು ಸುತ್ತಮುತ್ತ ಬೆಲೆ ಬಾಳುವ ಅರಣ್ಯ ಭೂಮಿ ಒತ್ತುವರಿಯಾಗಿದ್ದರೆ ಆದ್ಯತೆಯ ಮೇಲೆ ತೆರವು ಮಾಡುವಂತೆ ನಿರ್ದೇಶಿಸಿದ ಹಿನ್ನೆಲೆಯಲ್ಲಿ ಇಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ.

5 ಪ್ರಕರಣ: ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿರುವ ಮಧುಸೂದನಾನಂದ ಸ್ವಾಮಿ ವಿರುದ್ಧ ಈಗಾಗಲೇ 5 ಪ್ರಕರಣ ದಾಖಲು ಮಾಡಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

‘ಬೆಂಗಳೂರು ಸುತ್ತಮುತ್ತ ಭೂಮಿಗೆ ಬಂಗಾರದ ಬೆಲೆ ಇದೆ. ಕೆಲವರು ಸ್ವಾರ್ಥಕ್ಕಾಗಿ ಕೋಟ್ಯಂತರ ರೂ. ಬೆಲೆ ಬಾಳುವ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ. ಪ್ರಕೃತಿ, ಪರಿಸರ, ಕಾಡು ಮತ್ತು ವನಸಂಪತ್ತು ಉಳಿಸುವುದೇ ಇಲಾಖೆಯ ಕರ್ತವ್ಯವಾಗಿದ್ದು, ಬೆಂಗಳೂರಿನಲ್ಲಿ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿ ತೆರವು ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ’

-ಈಶ್ವರ್ ಖಂಡ್ರೆ ಅರಣ್ಯ ಸಚಿವ

LEAVE A REPLY

Please enter your comment!
Please enter your name here