ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಡಿಕೆ.ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿ ಏಪ್ರಿಲ್ 17ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಗುರುವಾರ ಪ್ರಕಟಿಸಿತು.
ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿಸಿದ್ದನ್ನು ಆಧರಿಸಿ, ತನಿಖಾ ಸಂಸ್ಥೆಯು 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್ 13 (2), 13 (1)(ಇ) ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.
ವಿಚಾರಣೆಯ ವೇಳೆ ಶಿವಕುಮಾರ್ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಉದಯ್ ಹೊಳ್ಳ ಅವರು ಸಿಬಿಐ ತನಿಖೆಗೆ ಅನುಮತಿಸಿರುವುದರ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ಈಗಾಗಲೇ ಆದಾಯ ತೆರಿಗೆಗೆ ಸಂಬಂಧಿಸಿದ ಮೂರು ಪ್ರಕರಣಗಳು ಶಿವಕುಮಾರ್ ಅವರ ಪರವಾಗಿವೆ. ಇದು ನಾಲ್ಕನೇ ಎಫ್ಐಆರ್. ಜನಪ್ರತಿನಿಧಿಗಳ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಿಸುವ ಮುನ್ನ ವಿಧಾನಸಭಾಧ್ಯಕ್ಷರ ಅನುಮತಿ ಪಡೆಯಬೇಕಿತ್ತು. ಅಂತೆಯೇ, ತನಿಖೆಗೆ ನೀಡಲಾಗಿರುವ ಆಡಳಿತಾತ್ಮಕ ನಿರ್ಧಾರದಲ್ಲಿ ಸಕಾರಣವೂ ಇಲ್ಲ. ಹೀಗಾಗಿ, ತನಿಖೆಗೆ ಶಿಫಾರಸ್ಸು ಮಾಡಲಾದ ಕ್ರಮವನ್ನು ರದ್ದುಗೊಳಿಸಬೇಕು” ಎಂದು ಕೋರಿದ್ದರು.
ಸಿಬಿಐ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ್ ಅವರು ಇಂಥದ್ದೇ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಹೇಳುವ ಹಕ್ಕು ಆರೋಪಿಗೆ ಇಲ್ಲ. ದೆಹಲಿ ಪೊಲೀಸ್ ಸ್ಥಾಪನಾ ಕಾಯಿದೆ 1947ರ ಸೆಕ್ಷನ್ 6ರ ಅಡಿಯಲ್ಲಿ ತನಿಖೆಗೆ ನೀಡಲಾದ ಒಪ್ಪಿಗೆಯ ಕಾರಣಗಳನ್ನು ವಿವರಿಸುವ ಅಗತ್ಯ ಸಿಬಿಐಗೆ ಇಲ್ಲ. ಎರಡೂವರೆ ವರ್ಷಗಳಲ್ಲಿ ಸಿಬಿಐ ಈಗಾಗಲೇ ಶೇ 90ರಷ್ಟು ತನಿಖೆ ಪೂರ್ಣಗೊಳಿಸಿದೆ. ಈ ಕುರಿತಂತೆ ತನಿಖೆಯ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೂ ಸಲ್ಲಿಸಲಾಗಿದೆ. ಇಷ್ಟೆಲ್ಲಾ ಸಮಯ ಕಳೆದ ಮೇಲೆ ಅರ್ಜಿದಾರರು ಅಧಿಸೂಚನೆ ಪ್ರಶ್ನಿಸುವುದು ಕಾನೂನು ಪ್ರಕಾರ ಸಾಧ್ಯವಿಲ್ಲ. ಹಾಲಿ ಪ್ರಕರಣವು ಆದಾಯ ತೆರಿಗೆ ಕಾನೂನುಗಳ ಪ್ರಕಾರ ದಾಖಲಿಸಿರುವ ವಿಶೇಷ ಕ್ರಿಮಿನಲ್ ಪ್ರಕರಣವಾಗಿದೆ. ಹೀಗಾಗಿ ಅರ್ಜಿ ವಜಾಗೊಳಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರದ ಪರ ವಾದಿಸಿದ್ದ ವಕೀಲರು ಸರ್ಕಾರ ನಿಯಮಗಳ ಪ್ರಕಾರ ತನಿಖೆಗೆ ಸಮ್ಮತಿ ನೀಡಿದೆ ಎಂದು ಸಮರ್ಥಿಸಿದ್ದರು.