ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ಗಳಲ್ಲಿ ಮತ್ತಷ್ಟು ಗುಣಮಟ್ಟದ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ಸೋಮವಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್ಗಳ ಸೇವಾ ಗುಣಮಟ್ಟವನ್ನು ಹೆಚ್ಚಿಸುವ ಜೊತೆಗೆ, ಅವುಗಳ ವ್ಯಾಪ್ತಿಯನ್ನು ವಿಸ್ತರಿಸುವುದಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಇಂದಿರಾ ಕ್ಯಾಂಟೀನ್ನಲ್ಲಿ ಸ್ವಚ್ಛತೆ ಇರುವುದಿಲ್ಲ ಎಂಬ ದೂರಿದೆ. ಅದರ ಜೊತೆಗೆ ಆಹಾರದ ಗುಣಮಟ್ಟ ಸರಿ ಇಲ್ಲ ಎಂಬ ಮಾತೂ ಇದೆ. ಈ ಹಿನ್ನೆಲೆಯಲ್ಲಿ ಹೊಸ ಮೆನುವಿನೊಂದಿಗೆ ಆಹಾರದ ಗುಣಮಟ್ಟ ಹೆಚ್ಚಿಸುವ ಜೊತೆಗೆ ಗ್ರಾಹಕರನ್ನು ಸೆಳೆಯಲು ಏನು ಮಾಡಬೇಕು ಎಂಬ ಬಗ್ಗೆ ಆಲೋಚಿಸಬೇಕಿದೆ’ ಎಂದು ತಿಳಿಸಿದರು.
‘ಇಂದಿರಾ ಕ್ಯಾಂಟೀನ್ ಅತ್ಯುತ್ತಮ ಯೋಜನೆಯಾಗಿದ್ದು, ದುಡಿಯುವ ವರ್ಗಕ್ಕೆ ಅತ್ಯಂತ ಕಡಿಮೆ ದರದಲ್ಲಿ ಊಟ ನೀಡಲಾಗುತ್ತಿದೆ. ಇಷ್ಟು ಕಡಿಮೆ ದರದಲ್ಲಿ ಯಾರೂ ನೀಡುವುದಿಲ್ಲ. ಆದರೆ ಜನರೇ ಬರುತ್ತಿಲ್ಲ. ಹೊಸದಾಗಿ ಇಂದಿರಾ ಕ್ಯಾಂಟೀನ್ ತೆರೆಯಲು ಸ್ಥಳಗಳನ್ನು ಪರಿಶೀಲಿಸಲಾಗುತ್ತದೆ. ಅದಕ್ಕೂ ಮುನ್ನ ಇರುವ ಕ್ಯಾಂಟೀನ್ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.
ಘನ ತ್ಯಾಜ್ಯ ನಿರ್ವಹಣೆ ಕುರಿತು ಮಾತನಾಡಿದ ಅವರು, ಕಸದ ಸಂಗ್ರಹಣೆ ಮತ್ತು ವಿಂಗಡಣೆಯನ್ನು ಒಂದೇ ಕೇಂದ್ರದಲ್ಲಿ ನಡೆಸುವ ಮೂಲಕ ಕಾರ್ಯಕ್ಷಮತೆಯನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು. ಈ ಯೋಜನೆಗೆ ಅಗತ್ಯವಿರುವ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ನಗರದಲ್ಲಿ ಹೆಚ್ಚುತ್ತಿರುವ ಪಾರ್ಕಿಂಗ್ ಸಮಸ್ಯೆ ಕುರಿತು ಪ್ರತಿಕ್ರಿಯಿಸಿ, ಯಾಂತ್ರಿಕ ವಾಹನ ನಿಲುಗಡೆ ವ್ಯವಸ್ಥೆಗಳನ್ನು ಸ್ಥಾಪಿಸಲು ಸೂಕ್ತ ಸ್ಥಳಗಳ ಗುರುತಿಸುವ ಕುರಿತು ಚರ್ಚೆಗಳು ನಡೆಯುತ್ತಿದ್ದು, ಇದು ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಲಿದೆ ಎಂದು ಹೇಳಿದರು.
ನಗರ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಜಿಬಿಎ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದರು.
