ಉಡುಪಿ : ನಗರಸಭೆಯ ವತಿಯಿಂದ ಉಡುಪಿ ನಗರದಲ್ಲಿ ಅತ್ಯಾಧುನಿಕ ಶೈಲಿಯ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವೀಸ್ ಬಸ್ ನಿಲ್ದಾಣಗಳನ್ನು ನಿರ್ಮಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಉಡುಪಿ ಶಾಸಕ ಯಶಪಾಲ್ ಎ.ಸುವರ್ಣ ತಿಳಿಸಿದ್ದಾರೆ.
ಉಡುಪಿ ನಗರಸಭಾ ವ್ಯಾಪ್ತಿಯ ಸಿಟಿ ಬಸ್ ನಿಲ್ದಾಣ, ಸರ್ವೀಸ್ ಬಸ್ ನಿಲ್ದಾಣ ಹಾಗೂ ವಿಶ್ವೇಶ್ವರಯ್ಯ ಮಾರುಕಟ್ಟೆಯ ವಾಣಿಜ್ಯ ಕಟ್ಟಡದ ಅಂಗಡಿ ಬಾಡಿಗೆದಾರರೊಂದಿಗೆ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ನಡೆಸಿದ ಸಮಾಲೋಚನಾ ಸಭೆಯಲ್ಲಿ ಶಾಸಕರು ಮಾತನಾಡುತಿದ್ದರು.
ಶೀಘ್ರದಲ್ಲೇ ತಜ್ಞರಿಂದ ಈ ಬಗ್ಗೆ ನೀಲನಕ್ಷೆ ತಯಾರಿಸಿ ನೆಲ ಅಂತಸ್ತು ಸಹಿತ ಮಲ್ಟಿ ಲೆವೆಲ್ ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಅಂಗಡಿಗಳು ಹಾಗೂ ಸುಸಜ್ಜಿತ ಬಸ್ ನಿಲ್ದಾಣದ ನಿರ್ಮಾಣದ ಬಗ್ಗೆ ಕಾರ್ಯಪ್ರವೃತ್ತವಾಗುವುದಾಗಿ ತಿಳಿಸಿದ ಅವರು ಇದಕ್ಕೆ ಸಂಬಂಧಪಟ್ಟಂತ ಅಂಗಡಿ ಬಾಡಿಗೆದಾರರ ಸಲಹೆ, ಸಹಕಾರ ಕೋರಿದರು.
ಉಡುಪಿ ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ವಾಹನ ದಟ್ಟಣೆ, ಪಾರ್ಕಿಂಗ್ ಕೊರತೆಯಿಂದ ಜನಸಾಮಾನ್ಯರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ಇವುಗಳ ನಿವಾರಣೆಗಾಗಿ ವ್ಯವಸ್ಥಿತವಾಗಿ ಯೋಜನೆಯನ್ನು ರೂಪಿಸಿ ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಅಂಗಡಿ ಬಾಡಿಗೆದಾರರು ನಗರದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರದ ಭರವಸೆ ನೀಡಿದರು. ಸಭೆಯಲ್ಲಿ ಪೌರಾಯುಕ್ತ ರಾಯಪ್ಪ, ನಗರಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.