ಧಾರವಾಡ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (ಐಐಟಿ )ದ ಕ್ಯಾಂಪಸ್ನಲ್ಲಿ ನಿರ್ಮಾಣವಾದ ಹೊಸ ಕೇಂದ್ರೀಯ ಕಲಿಕಾ ರಂಗಮಂದಿರ (ಸೆಂಟ್ರಲ್ ಲರ್ನಿಂಗ್ ಥಿಯೇಟರ್-ಸಿಎಲ್ಟಿ), ಜ್ಞಾನ ಸಂಪನ್ಮೂಲ ಮತ್ತು ದತ್ತಾಂಶ ಕೇಂದ್ರ (ಕೆಆರ್ಡಿಸಿ) ಮತ್ತು ಎರಡು ಹೊಸ ಪ್ರವೇಶ ದ್ವಾರಗಳ ಉದ್ಘಾಟನೆಯನ್ನು ಶುಕ್ರವಾರ (ಮಾ.1 )ದಂದು ಭಾರತದ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಉದ್ಘಾಟಿಸಿದರು.
ನಂತರ ಅವರು ಅಲ್ಲಿ ನೆರೆದಿದ್ದ ಸಂಸ್ಥೆಯ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಯನ್ನುದ್ದೇಶಿಸಿ ಪ್ರಧಾನ ಭಾಷಣ ಮಾಡಿದರು.
ಉಪರಾಷ್ಟ್ರಪತಿ ತಮ್ಮ ಭಾಷಣದಲ್ಲಿ ಐಐಟಿ ಧಾರವಾಡದ ಹಳೆಯ ವಿದ್ಯಾರ್ಥಿಗಳು ಸಂಸ್ಥೆಗೆ ಕೊಡುಗೆ ನೀಡಿ ಸಂಸ್ಥೆಯನ್ನು ಶ್ರೀಮಂತಗೊಳಿಸಬೇಕು ಎಂದು ಹೇಳಿದರು. ಸಂಸ್ಥೆಯ ಬೆಳವಣಿಗೆಗೆ ನೆರವು ನೀಡಲು ಭಾರತೀಯ ಕೌನ್ಸಿಲ್ ಆಫ್ ವರ್ಲ್ಡ್ ಅಫೇರ್ಸ್ ಮತ್ತು ಐಐಟಿ ಧಾರವಾಡ ನಡುವೆ ಎಂಓಯು ಸಾಧ್ಯವಾಗಿಸಲು ನಾವು ಅನುಕೂಲ ಮಾಡಿಕೊಡುತ್ತೇವೆ ಎಂದು ಅವರು ಹೇಳಿದರು.
ಉಪರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಭಾರತವು ಮುಂದಿನ ಕೆಲವು ವರ್ಷಗಳಲ್ಲಿ ಜಾಗತಿಕವಾಗಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ಸಜ್ಜಾಗಿದೆ. ಭಾರತವು ತನ್ನ ಗುರಿಗಳನ್ನು ಸಾಧಿಸಲು ಮತ್ತು 2047ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಶ್ರೇಣಿಗೆ ಸೇರುವಂತೆ ಮಾಡಲು ತಂತ್ರಜ್ಞಾನದ ಶಕ್ತಿಯನ್ನು ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಒತ್ತಾಯಿಸಿದರು.