Home Uncategorized ಕನ್ನಡ ಹೋರಾಟಗಾರರ ಬಂಧನದಿಂದ ದುಃಖವಾಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಕನ್ನಡ ಹೋರಾಟಗಾರರ ಬಂಧನದಿಂದ ದುಃಖವಾಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

29
0

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖದ ಸಂಗತಿ. ಕನ್ನಡ ಹೋರಾಟಗಾರರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು. ನಾಮಪಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.

ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಕನ್ನಡ ನಾಡಿನಲ್ಲಿ ಕನ್ನಡದ ಅನುಷ್ಟಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಆದರೆ, ಈಗ ಕಾನೂನೂ ಮಾಡದಿದ್ದರೆ ನಮ್ಮ ಮಕ್ಕಳಿಗೆ ಕಷ್ಟವಾಗಲಿದೆ ಎಂದರು.

ಕನ್ನಡದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು ಸಾಕಷ್ಟು ಶ್ರಮ ಹಾಕಿದೆ. ನಾನು ಮುಖ್ಯಮಂತ್ರಿ ಇದ್ದಾಗ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿಕೃತಗೊಳಿಸುವ ಪ್ರಯತ್ನ ಮಾಡಿದ್ದರು. ಆದರೆ, ನಾನು ಸುವರ್ಣ ಸೌಧದ ಮುಂದೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್ ಹಾಗೂ ಗಾಂಧಿ ಅವರ ಪ್ರತಿಮೆ ನಿಲ್ಲಿಸುವ ಕೆಲಸ ಮಾಡಿದ್ದೇನೆ ಎಂದರು.

ಕನ್ನಡ ನಿತ್ಯ ನಿರಂತರವಾಗಿರಬೇಕೆಂದರೆ ಕನ್ನಡಡಿಗರು ಜಾಗೃತರಾಗಿರಬೇಕು. ಜಗತ್ತು ಬದಲಾಗುತ್ತಿದೆ. ಸವಾಲುಗಳನ್ನು ಎದುರಿಸಲು ನಮ್ಮ ಮಕ್ಕಳನ್ನು ಸಿದ್ದಪಡಿಸಬೇಕಿದೆ. ಇಲ್ಲಿ ಐಟಿ ಬಿಟಿ ಯಾಕೆ ಅಭಿವೃದ್ಧಿಯಾಗಿದೆ ಎಂದರೆ. ಇಲ್ಲಿನ ಮಕ್ಕಳು ಜ್ಞಾನವಂತರಿದ್ದಾರೆ. ಸಾಧನೆ ಮಾಡಿದ್ದಾರೆ. ಅದೇ ಕಾರಣಕ್ಕೆ ಐಟಿ ಬಿಟಿಯವರು ಇಲ್ಲಿಗೆ ಬಂದಿದ್ದಾರೆ ಎಂದರು.

ಕುವೆಂಪು ವಿಶ್ವಮಾನವ

ಕುವೆಂಪು ಅವರು ಅಪರೂಪದ ವ್ಯಕ್ತಿತ್ವ ಒಂದು ರೀತಿಯಲ್ಲಿ ಅವರು ಯುಗಪುರುಷರು ಅಂತ ಹೇಳಲು ಬಯಸುತ್ತೇನೆ. ಅವರನ್ನು ಆಳವಾಗಿ ನೋಡಿದಾಗ ಅತ್ಯಂತ ಮಾನವೀಯ ಗುಣಗಳಿರುವ ವ್ಯಕ್ತಿ. ವಿಸ್ತಾರವಾಗಿ ನೋಡಿದಾಗ ವಿಶ್ವ ಮಾನವರಾಗಿ ಕಾಣುತ್ತಾರೆ.

ತಮ್ಮ ವಿಚಾರಧಾರೆಗಾಗಿ ಜಗತ್ತನ್ನು ಎದುರು ಹಾಕಿಕೊಳ್ಳುವ ಸ್ವಭಾವ ಅವರದಿತ್ತು. ಅವರು ಯಾವತ್ತೂ ಮುಲಾಜಿಗೆ ಬಿದ್ದು ಸಾಹಿತ್ಯ ರಚನೆ ಮಾಡಿಲ್ಲ. ಅದಕ್ಕಾಗಿ ಕುವೆಂಪು ಬಹಳ ಶ್ರೇಷ್ಟ. ವೈಚಾರಿಕತೆಯನ್ನು ಬಹಳ ಸರಳವಾಗಿ ಯೋಚಿಸುವ ಗುಣ ಕುವೆಂಪು ಅವರಿಗೆ ಇತ್ತು. ಎಲ್ಲವನ್ನೂ ಸ್ವೀಕರಿಸುವ ಗುಣ ಅವರಿಗೆ ಇದ್ದಿದ್ದರಿಂದ ಕುವೆಂಪು ವಿಶ್ವ ಮಾನವರಾಗಲು ಕಾರಣವಾಯಿತು ಎಂದು ಹೇಳಿದರು.

ವೈಚಾರಿಕತೆಯಲ್ಲಿ ಅವರು ಜಗಜ್ಯೋತಿ ಬಸವಣ್ಣನವರ ವಿಚಾರಗಳನ್ನು ವಿಮರ್ಶೆ ಮಾಡಿದ್ದಾರೆ. ಎಲ್ಲಿ ನೋಡಿದರೂ ಅವರ ಚಿಂತನೆ ಮತ್ತು ಸಾಹಿತ್ಯ ಇದೆ. ಹೀಗಾಗಿ ಈಗಲೂ ಕುವೆಂಪು ಜೀವಂತವಾಗಿದ್ದಾರೆ. ಅವರ ಸಾಹಿತ್ಯದಲ್ಲಿ ಎಲ್ಲದಕ್ಕೂ ಪರಿಹಾರ ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಹಾಗೂ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here