ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಅವರ ವಿರುದ್ಧ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಚಿಕ್ಕಮಗಳೂರು: ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಅವರ ವಿರುದ್ಧ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ತನಗೆ ಏನಾದರೂ ಆದರೆ ಅದಕ್ಕೆ ಶಾಸಕ ಆನಂದ್ ಅವರೇ ಹೊಣೆ. ಕಡೂರು ಶಾಸಕರಿಗೆ ನನ್ನ ಧಿಕ್ಕಾರವಿರಲಿ ಎಂದು ಮಹಿಳಾ ಪೊಲೀಸ್ ಪೇದೆ ಲಂತಾ ಅವರು ವಾಟ್ಸಪ್ ಸ್ಟೇಟಸ್ ಹಾಕಿದ್ದರು. ಇದಕ್ಕೆ ಸಂಬಂಧಿಸಿದ ಸ್ಕ್ರೀನ್ಶಾಟ್ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿದೆ.
ಇದನ್ನು ಓದಿ: ಚಿಕ್ಕಮಗಳೂರು: ಕ್ರಿಶ್ಚಿಯನ್ನರೇ ಇಲ್ಲದ ಗ್ರಾಮದಲ್ಲಿ ಚರ್ಚ್ ನಿರ್ಮಾಣಕ್ಕೆ ಹಿಂದೂಪರ ಸಂಘಟನೆ, ಗ್ರಾಮಸ್ಥರ ವಿರೋಧ
ಈ ಸಂದೇಶವನ್ನು ಗಮನಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಲತಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಚುನಾವಣಾ ಪ್ರಚಾರದ ವೇಳೆ ಹೆಲ್ಮೆಟ್ ಧರಿಸದ ಕಾಂಗ್ರೆಸ್ ಕಾರ್ಯಕರ್ತರಿಗೆ ಲತಾ ಅವರು ದಂಡ ವಿಧಿಸಿದ್ದರು. ಆನಂದ್ ಅವರು ಸ್ಥಳಕ್ಕೆ ಆಗಮಿಸಿ ತಮ್ಮ ಬೆಂಬಲಿಗರಿಗೆ ದಂಡ ವಿಧಿಸಿದ್ದನ್ನು ಪ್ರಶ್ನಿಸಿದ್ದರು. ಈ ಘಟನೆಯ ವಿಡಿಯೋ ಆಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈಗ ಲತಾ ಅವರನ್ನು ಕಡೂರು ಠಾಣೆಯಿಂದ ತರೀಕೆರೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಲತಾ, ಇದು ದ್ವೇಷದ ವರ್ಗಾವಣೆ ಎಂದು ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ವರ್ಗಾವಣೆ ವಿರೋಧಿಸಿ ಸಬ್ ಇನ್ಸ್ಪೆಕ್ಟರ್ ಜತೆಯೂ ಲತಾ ಮಾತಿನ ಚಕಮಕಿ ನಡೆಸಿದ್ದಾರೆಂದು ತಿಳಿದುಬಂದಿದೆ.