ಬೆಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ ಹೆಚ್.ಎಲ್. ನಾಗರಾಜ ಹೆಸರೂ ಸೇರಿದೆ. ಇದು ವಿರೋಧ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಹೆಚ್.ಎಲ್. ನಾಗರಾಜ್ ಅವರು ಸೇವೆಯಿಂದ ನಿವೃತ್ತರಾಗಿ ನಂತರ ಸನ್ಯಾಸ ಸ್ವೀಕರಿಸಿ ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಆಧ್ಯಾತ್ಮಿಕ ಜೀವನ ನಡೆಸುತ್ತಿರುವುದು ತಿಳಿದಿದ್ದರೂ, ಅವರ ಹೆಸರನ್ನು ಸೇವೆಯಲ್ಲಿರುವ ಅಧಿಕಾರಿಗಳ ಪಟ್ಟಿಯಲ್ಲಿ ಸೇರಿಸಿ ಪದೋನ್ನತಿ ನೀಡಲಾಗಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಅದಕ್ಷತೆ, ಅಸಮರ್ಥತೆ ಈಗ ಸೇವೆಯಿಂದ ಸ್ವಯಂನಿವೃತ್ತರಾಗಿ ಕಾವಿ ಧರಿಸಿ ಪೀಠಾಧಿಪತಿಯಾಗಿರುವವರಿಗೂ “ಬಡ್ತಿ ಭಾಗ್ಯ” ನೀಡುವ ಮಟ್ಟಕ್ಕೆ ತಲುಪಿದೆ. ಸಚಿವರು, ಅಧಿಕಾರಿಗಳು ಸಹಿ ಮಾಡುವ ಮುನ್ನ ಫೈಲುಗಳನ್ನು ಓದುತ್ತಾರೋ ಕಣ್ಣು ಮುಚ್ಚಿಕೊಂಡು ಸಹಿ ಹಾಕುತ್ತಾರೋ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
ಸರ್ಕಾರಕ್ಕೆ ಯಾವ ಅಧಿಕಾರಿಗಳು ಸೇವೆಯಲ್ಲಿ ಇದ್ದಾರೆ, ಯಾರು ನಿವೃತ್ತರಾಗಿದ್ದಾರೆ ಅನ್ನುವ ಕನಿಷ್ಠ ಮಾಹಿತಿಯೂ ಗೊತ್ತಿಲ್ಲದಿದ್ದರೆ, ರಾಜ್ಯದ ಜನತೆ ಆಡಳಿತ ಮತ್ತು ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ಮೇಲೆ ಹೇಗೆ ವಿಶ್ವಾಸ ಇಡಬೇಕು ಸ್ವಾಮಿ?
ಇವತ್ತು ನಿವೃತ್ತರಾಗಿರುವ ಅಧಿಕಾರಿಯೊಬ್ಬರಿಗೆ ಬಡ್ತಿ ನೀಡಿದ್ದೀರಿ, ನಾಳೆ ನಿಧನ ಹೊಂದಿರುವ ಅಧಿಕಾರಿಗೆ ವರ್ಗಾವಣೆ ಆದೇಶ ಹೊರಡಿಸಿದರೂ ಆಶ್ಚರ್ಯವಿಲ್ಲ! ಇದು ಕೇವಲ ಒಂದು ಆಕಸ್ಮಿಕ ಯಡವಟ್ಟು ಅಲ್ಲ. ಇದು ಆಡಳಿತ ವ್ಯವಸ್ಥೆಯ ಸಂಪೂರ್ಣ ಕುಸಿತದ ಸೂಚನೆ ಎಂದು ಕಿಡಿಕಾರಿದ್ದಾರೆ.
ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ!
ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ… pic.twitter.com/0u6zb6dgW5
— R. Ashoka (@RAshokaBJP) February 14, 2026
ದಿನಕ್ಕೊಂದು ಎಡವಟ್ಟು, ಕ್ಷಣಕ್ಕೊಂದು ಮುಖಭಂಗ. ಸಾಕು ಮಾಡಿ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕದ ಗೌರವ ಉಳಿಸಿ, ತಮ್ಮ ಇರೋಬರೋ ಅಲ್ಪ ಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ ಎಂದು ತಾಕೀತು ಮಾಡಿದ್ದಾರೆ.
