ಬೆಂಗಳೂರು: ಕೋವಿಡ್ ಸೋಂಕಿಗೆ ಸಂಬಂಧಿಸಿದ ಎಲ್ಲ ಐಎಲ್ಐ ಸಾರಿ ಪ್ರಕರಣಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲು ಸೂಚಿಸಲಾಗಿದ್ದು, ಕೋವಿಡ್ ಪಾಸಿಟಿವ್ ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಶುಕ್ರವಾರ ವಿಕಾಸಸೌಧದಲ್ಲಿ ಆರೋಗ್ಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ 7 ಸಾವಿರಕ್ಕೂ ಹೆಚ್ಚು ಟೆಸ್ಟ್ ಗಳನ್ನ ಮಾಡಲಾಗುತ್ತಿದೆ. ಕೋವಿಡ್ ಪಾಸಿಟಿವಿಟಿ ದರ ಶೇ. 3.82ರಷ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಇನ್ನೂ ಇಳಿಮುಖಗೊಂಡಿಲ್ಲ. ಕೇರಳ ರಾಜ್ಯದಲ್ಲಿ ಈಗಾಗಲೇ ಕೋವಿಡ್ನಲ್ಲಿ ಇಳಿಕೆಯ ಟ್ರೆಂಡ್ ಆರಂಭವಾಗಿದೆ. ಹೀಗಾಗಿ ಕೋವಿಡ್ ಪಾಸಿಟಿವ್ ಹೊಂದಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ ಎಂದರು.
ವಿಶೇಷವಾಗಿ ವಯಸ್ಕರಲ್ಲಿ ಐಎಲ್ಐ ಸಾರಿ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಬೇಕು. ಈ ಮೊದಲು ಈ ಪ್ರಕರಣಗಳಲ್ಲಿ 20ರಲ್ಲಿ ಒಂದು ಮಾತ್ರ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿತ್ತು. ಇನ್ನು ಮುಂದೆ ಎಲ್ಲ ಐಎಲ್ಐ ಸಾರಿ ಇರುವವರನ್ನು ಕೋವಿಡ್ ಟೆಸ್ಟ್ ನಡೆಸುವಂತೆ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಿಗೆ ನಿರ್ದೇಶನ ನೀಡಬೇಕು ಎಂದರು.
ರೋಗ ಲಕ್ಷಣಗಳು ಇರುವವರ ಮೇಲೆ ನಿಗಾ ವಹಿಸಿ ಟೆಸ್ಟಿಂಗ್ ಮಾಡಲಾಗುತ್ತಿದೆ. ಮನೆಯಲ್ಲಿ ಐಸೊಲೇಷನ್ ಆಗಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಹೇಳಲಾಗಿದೆ. ಕರ್ನಾಟಕದಲ್ಲಿ ಮುಂದಿನ ವಾರದಲ್ಲಿ ಕೋವಿಡ್ ಇಳಿಕೆಯ ಟ್ರೆಂಡ್ ಶುರುವಾಗಬಹುದು ಎಂದು ನೀರಿಕ್ಷಿಸಲಾಗಿದೆ. ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅವುಗಳನ್ನು ಅಳವಡಿಸಿಕೊಳ್ಳಬೇಕು ಎಂದರು.