ಉಡುಪಿ, ಜ.24: ರಂಗಭೂಮಿ ಉಡುಪಿ ವತಿಯಿಂದ ರಂಗಭೂಮಿ ರಂಗೋತ್ಸವ, ರಾಜ್ಯಮಟ್ಟದ ನಾಟಕೋತ್ಸವ ಸ್ಪರ್ಧೆ ಬಹುಮಾನ ವಿತರಣೆ ಕಾರ್ಯಕ್ರಮವು ಜ.25ರಿಂದ ಜ.27ರವರೆಗೆ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪ ಜರಗಲಿದೆ ಎಂದು ರಂಗಭೂಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಜ.25ರಂದು ಉದ್ಘಾಟನೆ ಕಾರ್ಯಕ್ರಮ ಮತ್ತು ಸಂಜೆ 6ಗಂಟೆಗೆ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಡಾ.ಕೆ. ಚಿನ್ನಪ್ಪ ಗೌಡ ಅವರಿಗೆ ಜಾನಪದ ಪ್ರತಿಭಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ ಎಂದರು.
ಜ.26ರಂದು ಸಂಜೆ 5.45ಕ್ಕೆ ನಾಟಕೋತ್ಸವ ಸ್ಪರ್ಧೆ ಬಹುಮಾನ ವಿತರಣೆ ನಡೆಯಲಿದೆ. ಜ.27ರಂದು ಸಂಜೆ 6ಗಂಟೆಗೆ ಹಿರಿಯ ಕಲಾವಿದೆ ಅರುಂಧತಿ ನಾಗ್ ಅವರಿಗೆ ರಂಗಭೂಮಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಅಂದು ಎಂಜಿಎಂ ಕಾಲೇಜು ನೂತನ ರವೀಂದ್ರ ಮಂಟಪದಲ್ಲಿ ಅರುಂದತಿ ನಾಗ್ ಅವರೊಂದಿಗೆ ಸಂವಾದ ನಡೆಯಲಿದೆ.
ರಂಗಭೂಮಿ ಉಡುಪಿ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ಜ.28ರಂದು ಮಧ್ಯಾಹ್ನ 2ಗಂಟೆಯಿಂದ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಅಂಬಾತನಯ ಮುದ್ರಾಡಿ ಸಂಸ್ಮರಣಾ ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಂಜೆ 4.20ಕ್ಕೆ ‘ಅಭಿನಯ ಕಲಿಸಲು ಸಾಧ್ಯವಿಲ್ಲ’ ಲೇಖಕ ಮೌನೇಶ ಬಡಿಗೇರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸ ಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ರಂಗಭೂಮಿ ಉಪಾಧ್ಯಕ್ಷ ಭಾಸ್ಕರ್ ರಾವ್ ಕಿದಿಯೂರು, ಅಮಿತಾಂಜಲಿ ಉಪಸ್ಥಿತರಿದ್ದರು.