ನವದೆಹಲಿ: ಇಮೇಲ್ ನಲ್ಲಿ ಸರಣಿ ಬಾಂಬ್ ಬೆದರಿಕೆ ಸಂದೇಶ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯ ಎಲ್ಲಾ ಮೆಟ್ರೋ ನಿಲ್ದಾಣಗಳು ಮತ್ತು ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ದೆಹಲಿ ವಿಧಾನಸಭೆ ದೆಹಲಿ ಅಸೆಂಬ್ಲಿ, ಸಚಿವಾಲಯ, ಕೆಂಪುಕೋಟೆ ಮತ್ತು ಎರಡು ಶಾಲೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಭದ್ರತಾ ಪಡೆಗಳು ತೀವ್ರ ತಪಾಸಣೆ ನಂತರ ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ದೃಢಪಡಿಸಿವೆ.
ಕೆಲವು ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿಸಲು ಬಳಸಿದ ಐಪಿ ವಿಳಾಸ ಪತ್ತೆಗಾಗಿ ಸೈಬರ್ ತಂಡಗಳು ಪ್ರಯತ್ನಿಸುತ್ತಿವೆ. ಅಂತಹ ಅಪರಾಧಿಗಳು ಪೋಲೀಸ್ ತನಿಖೆಯನ್ನು ದಾರಿ ತಪ್ಪಿಸಲು ಇಮೇಲ್ ಕಳುಹಿಸಲು ವರ್ಚುವಲ್ ಪ್ರೈವೇಟ್ ನೆಟ್ವರ್ಕ್ (VPN) ಬಳಸುತ್ತಿದ್ದಾರೆ. ಆದರೆ ನಮ್ಮ ತಜ್ಞರು ತಪ್ಪಿತಸ್ಥರನ್ನು ಪತ್ತೆ ಮಾಡುತ್ತಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಂಬ್ ಬೆದರಿಕೆ ಬಂದ ನಂತರ ದೆಹಲಿ ಮೆಟ್ರೋ ನಿಲ್ದಾಣಗಳು ಸೇರಿದಂತೆ ಎಲ್ಲಾ ಪ್ರಮುಖ ಕಟ್ಟಡಗಳಿಗೆ ಭದ್ರತಾ ವ್ಯವಸ್ಥೆಯನ್ನು ಪೊಲೀಸರು ಹೆಚ್ಚಿಸಿದ್ದಾರೆ ಎಂದು ಅಧಿಕಾರಿ ಹೇಳಿದರು. ಇಮೇಲ್ಗಳಲ್ಲಿ “ದೆಹಲಿ ಬನೇಗಾ ಖಲಿಸ್ತಾನ್” ಎಂದು ನಮೂದಿಸಲಾಗಿದ್ದು, ಮುಂದಿನ ಮೂರು ದಿನಗಳಲ್ಲಿ ದೆಹಲಿಯ ಸೇನಾ ಶಾಲೆ, ಕೆಂಪು ಕೋಟೆ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಸ್ಫೋಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇಂದು ಮಧ್ಯಾಹ್ನ 1. 11ಕ್ಕೆ ಸೇನಾ ಶಾಲೆಯಲ್ಲಿ, ಮಧ್ಯಾಹ್ನ 3.11ಕ್ಕೆ ವಿಧಾನಸಭೆ ಮತ್ತು ಬೆಳಗ್ಗೆ 9.11ಕ್ಕೆ ಕೆಂಪು ಕೋಟೆಯಲ್ಲಿ ಸ್ಫೋಟಗಳು ಸಂಭವಿಸಲಿವೆ ಎಂದು ಸಂದೇಶಗಳಲ್ಲಿ ಹೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೆಟ್ರೋ ನಿಲ್ದಾಣಗಳಲ್ಲಿ ಸ್ಪೋಟದ ಬೆದರಿಕೆ ಹಿನ್ನೆಲೆಯಲ್ಲಿ ಎಲ್ಲಾ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಎಲ್ಲಾ ಮೆಟ್ರೋ ನಿಲ್ದಾಣಗಳು ಮತ್ತು ಪ್ರಮುಖ ಕಟ್ಟಡಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಂಪು ಕೋಟೆ, ದೆಹಲಿ ವಿಧಾನಸಭೆ, ದೆಹಲಿ ಸಚಿವಾಲಯ ಸೇರಿದಂತೆ ಸೂಕ್ಷ್ಮ ಪ್ರದೇಗಳಲ್ಲಿ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳವನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
