ಹೈದರಾಬಾದ್: ಫೆಬ್ರವರಿ 25ರಂದು ಮೀರಾ ರಸ್ತೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಹಾಗೂ ತೆಲಂಗಾಣ ಬಿಜೆಪಿ ನಾಯಕ ಟಿ.ರಾಜಾ ಸಿಂಗ್ ವಿರುದ್ಧ ಬುಧವಾರ ಮೀರಾ ಭಯಾಂಡರ್ ವಸಾಯಿ ವಿರಾರ್ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ರಾಜಾ ಸಿಂಗ್ ರೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಿದ್ದ ನರೇಶ್ ನೈಲ್ ರನ್ನೂ ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದ್ವೇಷ ಭಾಷಣ ಮಾಡಿರುವ ಆರೋಪವನ್ನು ಆಧರಿಸಿ ರಾಜಾ ಸಿಂಗ್, ಬಿಜೆಪಿ ಶಾಸಕ ನಿತೇಶ್ ರಾಣೆ ಹಾಗೂ ಮೀರಾ ರಸ್ತೆಯ ಶಾಸಕಿ ಗೀತಾ ಜೈನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ದೂರುದಾರರೊಬ್ಬರು ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿಯೊಂದನ್ನು ಸಲ್ಲಿಸಿದ ವಾರದ ನಂತರ ಈ ಬೆಳವಣಿಗೆ ನಡೆದಿದೆ.
ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಸಮುದಾಯಗಳನ್ನು ವಿಭಜಿಸುವ ಹಾಗೂ ಅವರ ಭಾವನೆಗಳಿಗೆ ಧಕ್ಕೆ ತರುವ ಆರೋಪದಡಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(ಎ) ಹಾಗೂ 295 ಅನ್ವಯ ಪ್ರಾಥಮಿಕ ಮಾಹಿತಿ ವರದಿಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ಶೀಘ್ರವೇ ನೋಟಿಸ್ ರವಾನಿಸಲಾಗುವುದು ಎಂದೂ ಅವರು ಮಾಹಿತಿ ನೀಡಿದ್ದಾರೆ.