ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಕೋವಿಡ್ನಿಂದಾಗಿ ರವಿವಾರ ಮೃತಪಟ್ಟಿದ್ದಾರೆ.
ಪುತ್ತೂರು ಮೂಲದ ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದ 86ರ ಹರೆಯದ ವ್ಯಕ್ತಿಯೊಬ್ಬರು ಕೋವಿಡ್ನಿಂದ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ದೃಢಪಡಿಸಿದೆ. ಇದರೊಂದಿಗೆ ಈವರೆಗೆ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿದೆ.
ದ.ಕ.ಜಿಲ್ಲೆಯಲ್ಲಿ ಸೋಮವಾರ ಐದು ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ 10ಕ್ಕೇರಿದೆ. ಬೆಂಗಳೂರಿನಿಂದ ಆಗಮಿಸಿ ನಾಲ್ಕು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಕೋವಿಡ್ ದೃಢಪಟ್ಟಿತ್ತು. ಕಿಡ್ನಿ ವೈಫಲ್ಯ, ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿದೆ.
ನಗರದಲ್ಲಿ ವಾಸವಾಗಿದ್ದ ಕಟ್ಟಡ ಕಾರ್ಮಿಕರೊಬ್ಬರು ಕೋವಿಡ್ನಿಂದಾಗಿ ಡಿ.21ರಂದು ಮೃತಪಟ್ಟಿದ್ದರು. ಹೀಗಾಗಿ ಕೋವಿಡ್ನಿಂದಾಗಿ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ. ಜಿಲ್ಲೆಯಲ್ಲಿ 139 ಮಂದಿಯನ್ನು ಕೋವಿಡ್ ತಪಾಸಣೆಗೊಳಪಡಿಸಲಾಗಿದ್ದು, ಐವರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ.
86ರ ಹರೆಯದ ಮಹಿಳೆ ಮತ್ತು 81ರ ಹರೆಯದ ಪುರುಷ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ, 51ರ ಹರೆಯದ ವ್ಯಕ್ತಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 71ರ ಹರೆಯದ ವ್ಯಕ್ತಿ ಮತ್ತು 32ರ ಯುವಕ ಹೋಮ್ ಐಸೋಲೇಶನ್ ನಲ್ಲಿದ್ದಾರೆ ಎಂದು ತಿಳಿದು ಬಂದಿದೆ.