ಮಂಗಳೂರು, ಮಾ. 30: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್ಎಸ್)ದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ರಂಜಿನಿ ಎಂ. ಅವರು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್ ಅವರು ತಿಳಿಸಿದರು.
ಶನಿವಾರ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟನೆ ಮತ್ತು ಹೋರಾಟಗಳಲ್ಲಿ ನಿರಂತರವಾಗಿ ಪಾಲ್ಗೊಳ್ಳುತ್ತಿರುವುದನ್ನು ಪರಿಗಣಿಸಿ ಮಹಿಳೆಯರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಭ್ಯರ್ಥಿಯಾಗಿ ಪರಿಗಣಿಸಿದೆ ಎಂದರು.
ಮೂಲತಃ ಸುಳ್ಯ ತಾಲೂಕಿನ ಎಲಿಮಲೆಯವರಾದ ರಂಜಿನಿ ಎಂ. ಅವರು ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ಅವರು ಬಿ-ಫಾರಂ ನೀಡಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಕೆಆರ್ಎಸ್ ಸ್ಪರ್ಧಿಸುತ್ತಿದ್ದು, ಈಗಾಗಲೇ 23 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ ಎಂದು ಅವರು ಹೇಳಿದರು.
ಅಭ್ಯರ್ಥಿ ರಂಜಿನಿ ಎಂ. ಮಾತನಾಡಿ, ನಾನು ಕಳೆದ ಒಂದು ವರ್ಷದಿಂದ ಕೆಆರ್ಎಸ್ ಪಕ್ಷದಲ್ಲಿ ಕಾರ್ಯಕರ್ತೆಯಾಗಿದ್ದೇನೆ. ರಾಜ್ಯದ ಹಿತಾಸಕ್ತಿಗಾಗಿ, ಭ್ರಷ್ಟಾಚಾರದ ವಿರುದ್ಧ, ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಲು ನಿರಂತರವಾಗಿ ಪಕ್ಷ ಹೋರಾಟ ಮಾಡುತ್ತಾ ಬಂದಿದೆ. ಮಹಿಳೆಯರಿಗೆ ಭದ್ರತೆ, ಭ್ರಷ್ಟಾಚಾರಕ್ಕೆ ಕಡಿವಾಣ ನನ್ನ ಮುಖ್ಯ ಧ್ಯೇಯ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಮರುತನಿಖೆಗೆ ಆಗ್ರಹಿಸುತ್ತೇನೆ. ನಿಜವಾದ ಆರೋಪಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಂಟಿ ಕಾರ್ಯದರ್ಶಿ ಸೂಝಿ ರೊಸಾರಿಯೋ. ಪ್ರಧಾನ ಕಾರ್ಯದರ್ಶಿ ಸುನಿತಾ ರೊಸಾರಿಯೋ, ಜಿಲ್ಲಾ ಕಾರ್ಯದರ್ಶಿಗಳಾದ ವಿಶ್ವನಾಥ್, ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.