ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಂಬಂಧ ಅನಗತ್ಯ ಹೇಳಿಕೆ, ಚರ್ಚೆಗಳನ್ನು ಮಾತನಾಡಬಾರದು ಎಂದು ಸಚಿವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸ್ವತಃ ಈ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಮಾಧ್ಯಮಗಳ ಮುಂದೆ ಇಲ್ಲ ಸಲ್ಲದ ಹೇಳಿಕೆ ಕೊಡಬೇಡಿ ಎಂದು ಕಟ್ಟಪ್ಪಣೆ ಮಾಡಿದರು ಎನ್ನಲಾಗಿದೆ.
ದರ್ಶನ ಪ್ರಕರಣದ ಬಗ್ಗೆ ಯಾರು ಮಾತನಾಡಬಾರದು. ಯಾವುದೇ ವಿಷಯವನ್ನು ಸಾರ್ವಜನಿಕವಾಗಿ ಮಾತನಾಡುವ ಮೊದಲು ಪ್ರಕರಣದ ಗಂಭೀರತೆಯನ್ನು ಅರಿತುಕೊಳ್ಳಿ. ಸೂಕ್ಷ್ಮ ವಿಚಾರಗಳ ಬಗ್ಗೆ ಸೂಕ್ಷ್ಮತೆಯಿಂದ ವರ್ತಿಸಿ. ಸರಕಾರಕ್ಕೆ ಮುಜುಗರ ತರುವ ಕೆಲಸವನ್ನು ಮಾಡಬೇಡಿ ಎಂದು ಉಲ್ಲೇಖಿಸಿದರು ಎಂದು ಮೂಲಗಳು ತಿಳಿಸಿವೆ.