ಹುಬ್ಬಳ್ಳಿ: ನಾನು ಕಾಂಗ್ರೆಸ್ ವಿರೋಧಿ, ಬಿಜೆಪಿಯಲ್ಲೇ ಮುಂದುವರೆಯುತ್ತೇನೆ ಎಂದು ಹೇಳಿವ ಮೂಲಕ, ಕಾಂಗ್ರೆಸ್ ಪಕ್ಷ ಸೇರುವ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಊಹಾ ಪೋಹಗಳಿಗೆ ಮಾಜಿ ಸಚಿವ ಶಂಕರಪಾಟೀಲ ಮುನೇಕಕೊಪ್ಪ ತೆರೆ ಎಳಿದಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ. ಅದಾಗ್ಯೂ ಕಾಂಗ್ರೆಸ್ ಪಕ್ಷದಲ್ಲಿ ನನ್ನ ಆತ್ಮೀಯರಿದ್ದಾರೆ. ಶೆಟ್ಟರ್ ಬಿಜೆಪಿ ತೊರೆದ ಬಳಿಕ, ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಹಲವರು ನನಗೂ ಸಲಹೆ ನೀಡಿದ್ದರು. ಆದರೆ, ನಾನು ಬಿಜೆಪಿಯಲ್ಲೇ ಇರುವುದಾಗಿ ಸ್ಪಷ್ಟಪಡಿಸಿದ್ದೇನೆ ಎಂದರು.
ಬಿಜೆಪಿ ನಾಯಕರಾದ ಜೆ.ಪಿ. ನಡ್ಡಾ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಹಾಗೂ ಪ್ರಹ್ಲಾದ್ ಜೋಶಿ ಅವರು ಜಗದೀಶ ಶೆಟ್ಟರ್ ಅವರನ್ನು ಕರೆತಂದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಶೆಟ್ಟರ್, ಬಿಜೆಪಿಗೆ ವಾಪಸಾಗಿರುವುದರಿಂದ ಪಕ್ಷಕ್ಕೆ ಇನ್ನಷ್ಟು ಬಲ ಬಂದಂತಾಗಿದೆ ಎಂದರು.
ರಾಜ್ಯದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಆಯ್ಕೆ ಬಳಿಕ ಅನೇಕ ಬದಲಾವಣೆ ಆಗಿವೆ. ಈ ಹಿಂದೆ ಶೆಟ್ಟರ್ ಸ್ವಾಭಿಮಾನಕ್ಕೆ ದಕ್ಕೆಯಾಗಿದೆ ಎಂದು ಪಕ್ಷ ತೊರೆಯುವ ಕೆಲಸ ಮಾಡಿದ್ದರು. ಇದೀಗ ಸೂಕ್ತವಾದ ಸ್ಥಾನಮಾನ ಹೈಕಮಾಂಡ ನೀಡಿದೆ. ಈ ಹಿನ್ನೆಲೆ ಜಗದೀಶ್ ಶೆಟ್ಟರ್ ಪುನಃ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದರು.
ಲಿಂಗಾಯತ ಸಮೂದಾಯದ ನಾಯಕರಿಗೆ ಅನ್ಯಾಯ ಅಗಿದೆ ಎಂದು ನಾನು ಎಲ್ಲಿ ಹೇಳಿಲ್ಲ, ಆದರೆ ಎಲ್ಲರಿಗೂ ಸರಿಸಮಾನ ಅವಕಾಶ ಸಿಗಬೇಕೆಂಬುದು ನನ್ನ ಆಸೆ ಅದಕ್ಕೆ ಬದ್ದವಾಗಿದ್ದೇನೆ ಎಂದು ತಿಳಿಸಿದರು.
ಧಾರವಾಡ ಜಿಲ್ಲೆಯ ತಾಲೂಕುಗಳಲ್ಲಿ 2-3 ಬಣಗಳಿವೆ. ಅವುಗಳನ್ನು ಮುಂದಿನಗಳಲ್ಲಿ ಚರ್ಚಿಸಿ ಸರಿಪಡಿಸಲಾಗುವುದು, ನಮ್ಮೆಲ್ಲರ ಗುರಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡುವ ಉದ್ದೇಶ ಮಾತ್ರ, ಅದಕ್ಕಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಮಾಜಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ತಿಳಿಸಿದರು.