ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.
ಆಗಸ್ಟ್ 3 ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಸಿದ್ದರಾಮಯ್ಯ ಅವರು ಭೇಟಿ ಮಾಡಲಿದ್ದಾರೆ. ಭೇಟಿ ವೇಳೆ ಸಿದ್ದರಾಮಯ್ಯ ಅವರು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರ ಬಳಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅದಲ್ಲದೇ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದ ಸಹಕಾರ ಹಾಗೂ ರಾಜ್ಯ ಮತ್ತು ಕೇಂದ್ರದ ಸಹಭಾಗಿತ್ವದಡಿಯಲ್ಲಿ ವಿವಿಧ ಯೋಜನೆಗಳ ಪ್ರಾರಂಭದ ಬಗ್ಗೆಯೂ ಸಿದ್ದರಾಮಯ್ಯ ಅವರು ಪ್ರಸ್ತಾಪಿಸುವ ನಿರೀಕ್ಷೆ ಇದೆ.
ಮೋದಿ ಭೇಟಿ ವೇಳೆ ಸಿದ್ದರಾಮಯ್ಯ ಅವರು, ಅನ್ನಭಾಗ್ಯ ಉಚಿತ ಅಕ್ಕಿ ಯೋಜನೆಗಾಗಿ ಭಾರತೀಯ ಆಹಾರ ನಿಗಮದಿಂದ ಅಕ್ಕಿ ಪಡೆಯುವ ವಿಚಾರವನ್ನು ಪ್ರಸ್ತಾಪಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಗ್ರಾಹಕ ವ್ಯವಹಾರಗಳ ಸಚಿವಾಲಯವು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ-ಡೊಮೆಸ್ಟಿಕ್ ಅಡಿಯಲ್ಲಿ ರಾಜ್ಯಗಳಿಗೆ ಗೋಧಿ ಮತ್ತು ಅಕ್ಕಿ ಮಾರಾಟವನ್ನು ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಿಪಿಎಲ್, ಎಪಿಎಲ್ ಮತ್ತು ಅಂತ್ಯೋದಯ ಅನ್ನ ಯೋಜನಾ ಕಾರ್ಡ್ ಹೊಂದಿರುವ ಪ್ರತಿ ಫಲಾನುಭವಿಗೆ 10 ಕೆಜಿ ಉಚಿತ ಅಕ್ಕಿ ವಿತರಣೆ ಯೋಜನೆಯ ಮೇಲೆ ಈ ಆದೇಶ ಪರಿಣಾಮ ಬೀರಿದಂತೆ ಮಾಡಿದೆ. ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಾಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು 5 ಕೆಜಿ ಅಕ್ಕಿ ಬದಲಿಗೆ ನಗದು ವಿತರಿಸುತ್ತಿದೆ.
ಕಳೆದ ಬಾರಿ ಸಿದ್ದರಾಮಯ್ಯ ಅವರು ನವದೆಹಲಿಗೆ ಭೇಟಿ ನೀಡಿದಾಗ, ಮೋದಿ ಅವರು ಅಮೆರಿಕಾ ಪ್ರವಾಸದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ವಾಪಸ್ಸಾಗಿದ್ದರು.
ಸಿದ್ದರಾಮಯ್ಯ ಅವರು ಕೇವಲ ಪ್ರಧಾನಿ ಮೋದಿಯವರನ್ನಷ್ಟೇ ಅಲ್ಲದೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನೂ ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.