Home ಕರ್ನಾಟಕ ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ಎಲ್ಲರ ಹೊಣೆಗಾರಿಕೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ಎಲ್ಲರ ಹೊಣೆಗಾರಿಕೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

44
0

ಮಂಗಳೂರು: ಮಣ್ಣು , ನೀರು, ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆಯು ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಹೊಣೆಗಾರಿಕೆಯಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ದ.ಕ.ಜಿಲ್ಲಾಡಳಿತ, ದ.ಕ. ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಯುವ ರೆಡ್ ಕ್ರಾಸ್ ಘಟಕ, ಬ್ಯಾಂಕ್ ಆಫ್ ಬರೋಡಾದ ಸಹಯೋಗದೊಂದಿಗೆ ನಗರದ ಜಿಲ್ಲಾಧಿಕಾರಿ ನಿವಾಸದಲ್ಲಿ ಗುರುವಾರ ಹಮ್ಮಿಕೊಂಡ ಜೀವ ಜಲ ಉಳಿಸಿ ಅಭಿಯಾನದ ಜಲ ಸಂರಕ್ಷಣೆಯ ಭಿತ್ತಿ ಪತ್ರ ಬಿಡುಗಡೆಗೊಳಿಸಿ, ನೀರಿನ ಪಾತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಅವರು ಮಾತನಾಡಿದರು.

ಈ ನೈಸರ್ಗಿಕ ಸಂಪತ್ತು ಜಗತ್ತಿನ ಈಗಿನ ಮತ್ತು ಭವಿಷ್ಯದ ಸಕಲ ಜೀವರಾಶಿಗಳಿಗೆ ಸೇರಿದೆ. ಇದನ್ನು ಮಿತವಾಗಿ ಬಳಸುವುದು ಮತ್ತು ಉಳಿಸುವುದು ಅಗತ್ಯವಾಗಿದೆ. ಈ ಬಗ್ಗೆ ಸಾಮೂಹಿಕ ಜಾಗೃತಿ ಆಗಬೇಕಿದೆ. ಈ ಬೇಸಗೆಯಲ್ಲಿ ನೀರು ಉಳಿಸುವ ಮತ್ತು ಪ್ರಾಣಿ, ಪಕ್ಷಿಗಳ ಜೀವ ರಕ್ಷಣೆಗೆ ಮನೆಯ ಹಿತ್ತಲಲ್ಲಿ ಸಣ್ಣ ಪಾತ್ರಗಳಲ್ಲಿ ನೀರು ಇಡುವ ಮೂಲಕ ಜೀವ ಕೆಲಸದಲ್ಲಿ ಕೈ ಜೋಡಿಸಬೇಕಾಗಿದೆ ಎಂದು ಮುಲ್ಲೈ ಮುಗಿಲನ್ ಹೇಳಿದರು.

ಜೀವ ಜಲ ಉಳಿಸಿ ಅಭಿಯಾನಕ್ಕೆ ಬ್ಯಾಂಕ್ ಆಫ್ ಬರೋಡಾದ ಎಲ್ಲಾ ಶಾಖೆಗಳ ಮೂಲಕ ಸಹಕಾರ ನೀಡುವುದಾಗಿ ಬ್ಯಾಂಕ್ ಆಫ್ ಬರೋಡಾದ ಮಹಾಪ್ರಬಂಧಕ ಮತ್ತು ಮಂಗಳೂರು ವಲಯದ ಬ್ಯಾಂಕ್‌ನ ಮುಖ್ಯಸ್ಥೆ ಗಾಯತ್ರಿ ಆರ್. ತಿಳಿಸಿದ್ದಾರೆ.

ಬ್ಯಾಂಕ್ ಆಫ್ ಬರೋಡಾದ ಮುಖ್ಯ ಪ್ರಬಂಧಕ ಸತೀಶ್ ಪಾಠ್ಕರ್, ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿ ವಿಜಯ ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್, ಮಂಗಳೂರು ವಿಶ್ವ ವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕದ ನೋಡಲ್ ಅಧಿಕಾರಿ ಗಾಯತ್ರಿ ಎನ್, ಮನಪಾ ಅಭಿಯಂತರ ಅಶ್ವಿನ್, ಇಂಡಿಯನ್ ರೆಡ್‌ಕ್ರಾಸ್ ಘಟಕದ ಹಿರಿಯ ಸದಸ್ಯ ರವೀಂದ್ರನಾಥ ಉಚ್ಚಿಲ್, ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಮತ್ತಿತರರು ಉಪಸ್ಥಿತರಿದ್ದರು.

ದ.ಕ.ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here