ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಮಂಗಳೂರು, ಜೂ.20: ರಾಜ್ಯ ಕಾಂಗ್ರೆಸ್ ಸರಕಾರವು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಪಿವಿಎಸ್ ವೃತ್ತದ ಬಳಿ ಗುರುವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭ ಕೆಲಕಾಲ ಮಾನವ ಸರಪಳಿ ರಚಿಸಿ ವಾಹನ ಸಂಚಾರಕ್ಕೆ ತಡೆಯೊಡ್ಡಿದರು.
ರಸ್ತೆ ತಡೆಗೂ ಮುನ್ನ ಮಾತನಾಡಿದ ಸಂಸದ ಬ್ರಿಜೇಶ್ ಚೌಟ, ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಆಂತರಿಕ ಕಲಹವಿದೆ. ಜನರ ಗಮನ ಬೇರೆಡೆಗೆ ಸೆಳೆಯಲು ತೈಲಬೆಲೆ ಏರಿಕೆ ಮಾಡಿದೆ. ಆ ಮೂಲಕ ಜನ ಸಾಮಾನ್ಯರಿಗೆ ಸಿದ್ದರಾಮಯ್ಯ ಸರಕಾರ ಬರೆ ಹಾಕಿದೆ ಎಂದು ಆರೋಪಿಸಿದರು.
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯನ್ನು ರಾಜ್ಯದ ಜನತೆ ಬೆಂಬಲಿಸಿದ್ದಕ್ಕೆ ಶಿಕ್ಷೆ ನೀಡುವ ರೀತಿಯಲ್ಲಿ ತೈಲೆಬೆಲೆ ಹೆಚ್ಚಳ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗದೆ ಜನ ಸಾಮಾನ್ಯರಿಗೆ ಹೊಡೆತ ನೀಡಿವೆ. ತೈಲಬೆಲೆ ಏರಿಕೆ ಹಿಂಪಡೆಯದಿದ್ದರೆ ರಾಜ್ಯ ವಿಧಾನಸಭೆಯ ಅಧಿವೇಶನದಲ್ಲೂ ಶಾಸಕರು ಹೋರಾಟ ಮಾಡಲಿದ್ದಾರೆ ಎಂದರು.
ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಿತಿನ್ಕುಮಾರ್, ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರ್, ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ವಿಜಯಕುಮಾರ್ ಶೆಟ್ಟಿ, ಮತ್ತಿತರರು ಭಾಗವಹಿಸಿದ್ದರು.
