ಬಳ್ಳಾರಿ: ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಮನೆ, ಕಚೇರಿಗಳ ಮೇಲೆ ಶನಿವಾರ ಮುಂಜಾನೆ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಭರತ್ ರೆಡ್ಡಿ ಅವರ ಚೆನ್ನೈನಲ್ಲಿರುವ ಕಚೇರಿಗಳ ಮೇಲೂ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.
ಶಾಸಕ ಭರತ್ ರೆಡ್ಡಿ ಅವರ ಕುಟುಂಬ ಗ್ರಾನೈಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಕೊಪ್ಪಳ ಜಿಲ್ಲೆಯ ಕುಕನೂರು, ಆಂಧ್ರ ಪ್ರದೇಶದ ಒಂಗೋಲ್ ಗಳಲ್ಲಿ ಕ್ವಾರಿಗಳನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಭರತ್ ರೆಡ್ಡಿ ಅವರ ತಂದೆ, ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮತ್ತು ಸಂಬಂಧಿಗಳ ಮನೆಗಳು, ಕಚೇರಿಗಳಲ್ಲೂ ಶೋಧ ನಡೆದಿದೆ ಎಂದು ಹೇಳಲಾಗುತ್ತಿದೆ.
ಕೆಲ ವರ್ಷಗಳ ಹಿಂದೆ ಭರತ್ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಐ.ಟಿ ಅಧಿಕಾರಿಗಳೂ ದಾಳಿ ನಡೆಸಿದ್ದರು. ಇಂದು ಬೆಂಗಳೂರಿನಿಂದ ಆಗಮಿಸಿದ ಇ.ಡಿ ಅಧಿಕಾರಿಗಳ ತಂಡ, ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ