Home ಕರ್ನಾಟಕ ಬಿಜೆಪಿ- ಜೆಡಿಎಸ್ ಮೈತ್ರಿ‌ ಮಾಡಿಕೊಳ್ಳಲು ಮೂಲ ಕಾರಣವೇ ಕಾಂಗ್ರೆಸ್:‌ ಎಚ್‌.ಡಿ. ಕುಮಾರಸ್ವಾಮಿ

ಬಿಜೆಪಿ- ಜೆಡಿಎಸ್ ಮೈತ್ರಿ‌ ಮಾಡಿಕೊಳ್ಳಲು ಮೂಲ ಕಾರಣವೇ ಕಾಂಗ್ರೆಸ್:‌ ಎಚ್‌.ಡಿ. ಕುಮಾರಸ್ವಾಮಿ

42
0

ಬೆಂಗಳೂರು: ಜೆಡಿಎಸ್‌ನ ಮೂರು ಮತ್ತು ಬಿಜೆಪಿಯ 25 ಅಭ್ಯರ್ಥಿಗಳ ಗೆಲುವಿಗೆ ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ. ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಲ್ಲಿ ಯಾವ ಸಮಸ್ಯೆಯೂ ಇಲ್ಲ. ಬಿಜೆಪಿ- ಜೆಡಿಎಸ್ ಮೈತ್ರಿ‌ ಮಾಡಿಕೊಳ್ಳಲು ಮೂಲ ಕಾರಣವೇ ಕಾಂಗ್ರೆಸ್ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಕೋಲಾರ ಅಭ್ಯರ್ಥಿಗೆ ಸಂಬಂಧಿಸಿದ ವಿಷಯ ಶೀಘ್ರ ಇತ್ಯರ್ಥವಾಗಲಿದೆ.ಮಂಡ್ಯದ ಜೆಡಿಎಸ್‌ ಕಾರ್ಯಕರ್ತರಿಗೆ ನಿರಾಸೆಯಾಗದಂತಹ ನಿರ್ಧಾರವನ್ನು ಕೈಗೊಳ್ಳುತ್ತೇನೆ. ಅಲ್ಲಿನ ನನ್ನ ಕಾರ್ಯಕರ್ತರಿಗಾಗಿ ಯಾವುದೇ ರೀತಿಯ ನಿರ್ಧಾರ ಕೈಗೊಳ್ಳುವುದಕ್ಕೂ ನಾನು ಸಿದ್ಧ. ಕಾರ್ಯಕರ್ತರೇ ಅಲ್ಲಿ ನಮ್ಮ ಅಭ್ಯರ್ಥಿಗಳು. ಇಂದಿನಿಂದಲೇ ಚುನಾವಣಾ ಕೆಲಸವನ್ನು ಆರಂಭಿಸುತ್ತಾರೆ. ಅಭ್ಯರ್ಥಿಗಳ ಹೆಸರು ಶೀಘ್ರದಲ್ಲೇ  ಪ್ರಕಟಿಸಲಾಗುವುದು ಎಂದು ಹೇಳಿದರು.

ನಮ್ಮ ಪಕ್ಷದ ಬಗ್ಗೆ ಈಗ ಅನುಕಂಪದ ಮಾತನಾಡುತ್ತಿರುವ ಡಿಸಿಎಂ ಸಹಿತವಿರುವ ಕಾಂಗ್ರೆಸ್‌  ನಾಯಕರು,  ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಕಾರಣಕ್ಕೆ ಜೆಡಿಎಸ್‌ ಮುಗಿದು ಹೋಯಿತು ಎಂದು ಹೇಳುತ್ತಿದ್ದಾರೆ. ಇವರ ಅನುಕಂಪ ನನಗೆ ಬೇಕಿಲ್ಲ. ರಾಜ್ಯದಲ್ಲಿರುವ ಪಾಪದ ಸರ್ಕಾರದ ವಿರುದ್ಧ ನಾವು ಒಟ್ಟಾಗಿದ್ದೇವೆ ಎಂದು ಹೇಳಿದರು.

ʼನನ್ನನ್ನು ಕಾಂಗ್ರೆಸ್‌ ನಾಯಕರು ಹೇಗೆ ನಡೆಸಿಕೊಂಡಿದ್ದರು ಎಂಬುದು ಗೊತ್ತಿದೆ. ಬಿಜೆಪಿಯವರು ಯಾವತ್ತೂ ಅಗೌರವದಿಂದ ನಡೆಸಿಕೊಂಡಿಲ್ಲ. ಮೈತ್ರಿ ಸರ್ಕಾರ ಪತನಗೊಳಿಸುವುದಲ್ಲಿ ನಿಮ್ಮ ಪಾತ್ರ ಏನು ಎಂಬುದು ಗೊತ್ತಿದೆ. ನಿಮ್ಮಂತೆ ಬಿಜೆಪಿಯವರು ನಮ್ಮ ಕತ್ತು ಕೊಯ್ದಿಲ್ಲʼ ಎಂದು ಸಿಎಂ, ಡಿಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಸಂವಿಧಾನ ಉಳಿಸಿ ಎಂದು ಮನವಿ ಮಾಡುತ್ತಾ ಹೊರಟಿರುವ ಕಾಂಗ್ರೆಸ್‌ ನಾಯಕರು ದೇವೇಗೌಡರ 60 ವರ್ಷದ ರಾಜಕೀಯವನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ಮೈತ್ರಿ ಸರ್ಕಾರ ರಚಿಸಿದ ಕಾಂಗ್ರೆಸ್‌, ಅದೇ ಅವಕಾಶ ಬಳಸಿಕೊಂಡು ಜೆಡಿಎಸ್‌ ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ಆರಂಭಿಸಿತ್ತು. ನಮ್ಮ ಮುಖಂಡರು, ಕಾರ್ಯಕರ್ತರಿಗೆ ಆಮಿಷ ಒಡ್ಡಿ ತನ್ನತ್ತ ಸೆಳೆಯುವ ಕೆಲಸ ಮಾಡಿತ್ತು. ಜೆಡಿಎಸ್‌ ಅನ್ನು ದುರ್ಬಲಗೊಳಿಸುವ ಕಾಂಗ್ರೆಸ್‌ನ ಪ್ರಯತ್ನವನ್ನು ತಡೆಯುವುದಕ್ಕಾಗಿಯೇ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

LEAVE A REPLY

Please enter your comment!
Please enter your name here