ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಅಕ್ರಮ ಹಗರಣ ಸಂಬಂಧ ಸಿಸಿಬಿ ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಹಾಗೂ ಸೈಬರ್ ತಜ್ಞ ಸಂತೋಷ್ ನನ್ನು ಜ.31ರ ವರೆಗೆ (6 ದಿನಗಳ ಕಾಲ) ಸಿಐಡಿಯ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಬಂಧಿತರನ್ನು ಗುರುವಾರ ಮಧ್ಯಾಹ್ನ 1ನೆ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಇಬ್ಬರನ್ನು ಜ.31ರ ವರೆಗೆ 6 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡುವಂತೆ ಆದೇಶಿಸಿದ್ದಾರೆ.
ಪ್ರಕರಣ ಹಿನ್ನೆಲೆ: 2020ರಲ್ಲಿ ಕೆಂಪೇಗೌಡ ನಗರ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಆರೋಪಿ ಸುಜಯ್ ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಡಾರ್ಕ್ ನೆಟ್ನಲ್ಲಿ ಬಿಟ್ಕಾಯಿನ್ ಮೂಲಕ ಡ್ರಗ್ಸ್ ಖರೀದಿ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣದ ಜಾಡು ಹಿಡಿದು ಸಾಗಿದ ಪೊಲೀಸರು ಶ್ರೀಕೃಷ್ಣ ಯಾನೆ ಶ್ರೀಕಿ ಎಂಬಾತನನ್ನು ಬಂಧಿಸಿದ್ದರು.
ಆನಂತರ, ಈತ ಸರಕಾರಿ ವೆಬ್ಸೈಟ್ ಹಾಗೂ ಆನ್ಲೈನ್ ಗೇಮಿಂಗ್ ಆ್ಯಪ್ ಗಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ಹಣವನ್ನು ಅಕ್ರಮವಾಗಿ ಸಂಪಾದಿಸಿರುವ ಕುರಿತು ಮಾಹಿತಿ ಹೊರಬಂದಿತ್ತು. ಈ ಬೆನ್ನಲ್ಲೇ ಪ್ರಕರಣವನ್ನು ಆಗಿನ ಸರಕಾರ ಸಿಸಿಬಿಗೆ ಹಸ್ತಾಂತರಿಸಿತ್ತು. ಸಿಸಿಬಿ ತನಿಖೆಯಲ್ಲಿ ದೊಡ್ಡ ಪ್ರಮಾಣದಲ್ಲಿ ವಂಚನೆ ನಡೆದಿರುವುದು ಬೆಳಕಿಗೆ ಬಂದಿತ್ತು.
ಪ್ರಕರಣದಲ್ಲಿ ಹಿಂದಿನ ಸರಕಾರ ಕೆಲವು ರಾಜಕಾರಣಿಗಳೂ ಶಾಮೀಲಾಗಿದ್ದಾರೆ ಎಂದು ಆಗ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಟ್ಕಾಯಿನ್ ಪ್ರಕರಣವನ್ನು ಮರುತನಿಖೆ ನಡೆಸಲು ಕಳೆದ ಜುಲೈನಲ್ಲಿ ಸಿಟ್ ತಂಡ ರಚಿಸಿತ್ತು.