ಬೆಂಗಳೂರು: “ಬೆಂಗಳೂರಿನಲ್ಲಿ ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು, ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸೋಮವಾರ ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು ಅಹವಾಲು ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನ ಅತಿಥಿ ಉಪನ್ಯಾಸಕರು ಇಂದು ನನ್ನನ್ನು ಭೇಟಿ ಮಾಡಿ, ನಮ್ಮನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಕೇಳಿಕೊಂಡಿದ್ದಾರೆ. ಹಾಗೆಯೇ ಇಂದು ಆಗಮಿಸಿದವರಲ್ಲಿ ಉತ್ತಮವಾಗಿ ಬೋಧನೆ ಮಾಡುವ ಶಿಕ್ಷಕರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ವಿಚಾರವಾಗಿ ಮತ್ತೆ ಪರಿಶೀಲನೆ ಮಾಡುತ್ತೇನೆ. ನಮಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಬಹಳ ಮುಖ್ಯ ಎಂದರು.
“ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಸುಪರ್ದಿಗೆ ಈ ಶಾಲೆಗಳನ್ನು ನೀಡಿದ್ದೇವೆ. ಸರಿಯಾಗಿ ತರಬೇತಿ ಹೊಂದಿರುವ ಶಿಕ್ಷಕರನ್ನು ನೇಮಿಸಬೇಕಿದೆ. ಬಿಬಿಎಂಪಿ ವತಿಯಿಂದ ಎಲ್ಲಾ ಮೂಲಸೌಕರ್ಯ ಒದಗಿಸಲಾಗುವುದು, ಶಿಕ್ಷಣದ ಜವಾಬ್ದಾರಿಯನ್ನು ಇಲಾಖೆಗೆ ವಹಿಸಲಾಗಿದೆ” ಎಂದು ತಿಳಿಸಿದರು.
ಕನ್ನಡ ನಾಮಫಲಕ ವಿಚಾರವಾಗಿ ಕನ್ನಡಪರ ಸಂಘಟನೆಗಳ ಹೋರಾಟದ ಬಗ್ಗೆ ಕೇಳಿದಾಗ, “ಕನ್ನಡ ಪರ ಸಂಘಟನೆಗಳು ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಮಾಡಬೇಕು. ಹೋರಾಟದ ಹೆಸರಿನಲ್ಲಿ ಯಾರ ಆಸ್ತಿಪಾಸ್ತಿಗೂ ಹಾನಿ ಮಾಡಬಾರದು. ಬೆಂಗಳೂರಿಗೆ ಬಂದು ವ್ಯಾಪಾರ ಮಾಡಿ ಬದುಕುತ್ತಿರುವವರು ತಮ್ಮ ಮಳಿಗೆ ಬೋರ್ಡ್ ನಲ್ಲಿ ಶೇ60 ರಷ್ಟು ಕನ್ನಡ ಇರಬೇಕು ಎಂಬ ಕಾನೂನು ಇದ್ದು, ಯಾರು ಎಷ್ಟೇ ದೊಡ್ಡ ವ್ಯಾಪಾರಸ್ಥರಾದರೂ ಎಲ್ಲರೂ ಅದನ್ನು ಪಾಲನೆ ಮಾಡಬೇಕು” ಎಂದು ತಿಳಿಸಿದರು.
ಹಿಜಾಬ್ ವಿಚಾರವಾಗಿ ಆಲೋಚನೆ ಮಾಡಿಲ್ಲ
” ನಾವು ಆ ವಿಚಾರವಾಗಿ ಆಲೋಚನೆ ಮಾಡಿಲ್ಲ. ಮಾಧ್ಯಮಗಳೇ ಇದನ್ನು ದೊಡ್ಡ ವಿಷಯ ಮಾಡುತ್ತಿವೆ. ಹಿಜಾಬ್ ವಿಚಾರವಾಗಿ ಚರ್ಚೆಗೆ ಬರುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಸರ್ಕಾರದ ಮುಂದೆ ಪ್ರಸ್ತಾವನೆ ಎಲ್ಲಿದೆ?” ಎಂದು ಪ್ರಶ್ನಿಸಿದರು.
ಸಚಿವ ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ ಬಗ್ಗೆ ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ” ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು.