ಮೈಸೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಸ್ಪೋಟದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.
ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶುಕ್ರವಾರ ಸಂಜೆ ಮೈಸೂರಿಗೆ ಆಗಮಿಸಿದ ಸಿಎಂ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಸ್ಪೊಟದ ಬಗ್ಗೆ ತನಿಖೆ ನಡೆಯುತ್ತಿದೆ. ಗೃಹ ಸಚಿವರನ್ನು ಸ್ಥಳಕ್ಕೆ ತೆರಳಿ ಪರಿಶೀಲಿಸುವಂತೆ ಸೂಚಿಸಿದ್ದೇನೆ. ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಘಟನೆಯಿಂದ ಹಲವರಿಗೆ ಗಾಯಗಳಾಗಿವೆ. ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಯಾರೋ ಒಬ್ಬರು ಬ್ಯಾಗ್ ಇಟ್ಟು ಹೋಗಿರುವುದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.
ಇದನ್ನು ಉಗ್ರರು ಮಾಡಿದ್ದಾರೊ ಅಥವಾ ಬೇರೆ ಯಾರಾದರು ಮಾಡಿದ್ದಾರೊ ಇನ್ನು ಗೊತ್ತಿಲ್ಲ. ಇದೊಂದು ಸುಧಾರಿತ ಸ್ಪೋಟ ಪ್ರಕರಣವಾಗಿದೆ. ದೊಡ್ಡ ಪ್ರಮಾಣದಲ್ಲಿ ನಡೆದಿಲ್ಲ, ಸಣ್ಣ ಪ್ರಮಾಣದದ್ದಾದರೂ ಪರಿಣಾಮಕಾರಿಯಾಗಿದೆ ಎಂದು ಹೇಳಿದರು.
ಎಲ್ಲರ ಕಾಲದಲ್ಲೂ ಇಂತಹ ಘಟನೆಗಳು ನಡೆದಿವೆ. ಆದರೆ, ಇಂತಹ ಘಟನೆ ನಡೆಯಬಾರದು. ಇತ್ತೀಚೆಗೆ ಇಂಥದ್ದು, ಆಗಿರಲಿಲ್ಲ. ಮಂಗಳೂರಲ್ಲಿ ಘಟನೆ ನಡೆದಿತ್ತು. ಬಿಜೆಪಿ ಸರಕಾರದಲ್ಲೂ ಹಲವು ಸ್ಫೋಟಗಳು ನಡೆದಿದ್ದವು. ನಮ್ಮ ಸರಕಾರದಲ್ಲಿ ಇದೇ ಮೊದಲ ಘಟನೆಯಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.