ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಡೆದಿರುವ ಅವ್ಯವಹಾರಗಳನ್ನು ಸಹಿಸುವುದಿಲ್ಲ, ಸತ್ಯಾಂಶ ತಿಳಿಯಲು ಎಲ್ಲಾ ಅವ್ಯವಹಾರಗಳ ಬಗ್ಗೆ ಸಿಐಡಿ ತನಿಖೆ ನಡೆಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು. ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಡೆದಿರುವ ಅವ್ಯವಹಾರಗಳನ್ನು ಸಹಿಸುವುದಿಲ್ಲ, ಸತ್ಯಾಂಶ ತಿಳಿಯಲು ಎಲ್ಲಾ ಅವ್ಯವಹಾರಗಳ ಬಗ್ಗೆ ಸಿಐಡಿ ತನಿಖೆ ನಡೆಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ 1 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು 20-25 ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗಿದೆ. ಇಂತಹ ಹಗರಣಗಳ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಪ್ರಕಾರ, ಎರಡು ಬಾರಿ ಅಧಿಸೂಚನೆ ಹೊರಡಿಸಿದ್ದರೂ ಜನರು ವಿವಿಧ ವಸತಿ ನಿವೇಶನಗಳ ಹರಾಜಿನಲ್ಲಿ ಭಾಗವಹಿಸಿಲ್ಲ ಎಂದು ಹೇಳಲಾಗಿದೆ. ವಾಸ್ತವವಾಗಿ, ಇ-ಹರಾಜಿಗೆ ಗ್ರಾಹಕರಿಂದ ಯಾವುದೇ ಪ್ರತಿಕ್ರಿಯೆ ಇಲ್ಲದಿದ್ದಲ್ಲಿ, ಅವರು ಹಸ್ತಚಾಲಿತ ಹರಾಜು ನಡೆಸಬೇಕಿತ್ತು. ಆದರೆ, 1 ಕೋಟಿ ರೂಪಾಯಿ ಮೌಲ್ಯದ ಪ್ರತಿ ನಿವೇಶನವನ್ನು ಕೇವಲ 25 ಲಕ್ಷ ರೂಪಾಯಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಇದರಿಂದ ಸರ್ಕಾರಕ್ಕೆ 100 ಕೋಟಿ ರೂಪಾಯಿ ನಷ್ಟವಾಗಿದೆ, ನಾವು ಯಾವುದೇ ನಿಯಮಾವಳಿ ಉಲ್ಲಂಘಿಸುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಮಂಗಳವಾರದಿಂದ ಎಲ್ಲ ಶಾಲೆಗಳ ಶೈಕ್ಷಣಿಕ ವರ್ಷ ಆರಂಭವಾಗುತ್ತಿದೆ. ನಾವು ಹೊಸ ಶಿಕ್ಷಣ ನೀತಿ (ಎನ್ಇಪಿ)ಗೆ ವಿರುದ್ಧವಾಗಿದ್ದೇವೆ, ಆದ್ದರಿಂದ ಶಾಲಾ ಪಠ್ಯಕ್ರಮದಿಂದ ಅನಗತ್ಯ ಅಧ್ಯಾಯಗಳನ್ನು ತೆಗೆದುಹಾಕಲು ಕ್ರಮಕೈಗೊಳ್ಳಲಾಗುವುದು ಎಂದರು.
ಉತ್ತಮ ಆಡಳಿತ ನಡೆಸುವ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ, ಅಭಿವೃದ್ಧಿಗೆ ಜಿಲ್ಲೆಯನ್ನು ವಿಭಜಿಸುವುದು ಅತ್ಯಗತ್ಯ. ಈ ಕುರಿತು ಬಹಳ ದಿನಗಳಿಂದ ಸರ್ಕಾರದ ಮೇಲೆ ಒತ್ತಡ ಹೇರುತ್ತಲೇ ಬಂದಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ಯಾವಾಗ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡುತ್ತೇವೆ ಎಂದು ಹೇಳಿದರು.
ಈ ವರೆಗೂ ಒಂದು ದಿನ ಕೆಡಿಪಿ ಸಭೆ ನಡೆಸಿ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿತ್ತು. ಆದರೆ ಇನ್ನು ಮುಂದೆ ಆ ರೀತಿ ಮಾಡುವುದಿಲ್ಲ. ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನೆಯನ್ನು ಇಟ್ಟುಕೊಂಡು ಸಮಗ್ರವಾಗಿ ಪರಿಶೀಲಿಸಲಾಗುವುದು. ಅದರಂತೆ ಜೂನ್ 6ರಂದು ಬೆಳಗಾವಿಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಮುಂದೊಂದು ದಿನ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರೆ: ಲಕ್ಷ್ಮಿ ಹೆಬ್ಬಾಳ್ಕರ್
ರಾಜ್ಯದ ಜನರು ನಮ್ಮ ಮೇಲೆ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದಾರೆ, ಬಿಜೆಪಿ ಆಡಳಿತದಲ್ಲಿ ಅನೇಕ ರಸ್ತೆಗಳು ಸುಧಾರಿಸಿಲ್ಲ, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿವೆ, ಅದನ್ನು ನಾವು ಪರಿಹರಿಸುತ್ತೇವೆ. ಬೆಳಗಾವಿ ನಗರ ಮತ್ತು ಜಿಲ್ಲೆಯ ಎಲ್ಲಾ ನಾಗರಿಕ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತೇವೆಂದು ತಿಳಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆದಿರುವ ಹಗರಣಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಬೆಂಗಳೂರಿನಿಂದಲೇ ತನಿಖೆ ನಡೆಸಲಾಗುವುದು ಎಂದರು.
ಈಸ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಆಸೀಫ್ ಸೇಠ್, ಮಹಾಂತೇಶ ಕೌಜಲಗಿ, ವಿಶ್ವ ವೈದ್ಯ, ಚನ್ನರಾಜ ಹಟ್ಟಿಹೊಳಿ ಮತ್ತಿತರರು ಉಪಸ್ಥಿತರಿದ್ದರು.