ಎಲ್ಲಾ 16,000 ನೌಕರರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಬೆಂಗಳೂರು: ಎಲ್ಲಾ 16,000 ನೌಕರರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಪಾಲಿಕೆಯ ಮುಖ್ಯಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಮಿಕರು, ಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಪೈಕಿ 3,673 ಪೌರಕಾರ್ಮಿಕರನ್ನು ಖಾಯಂಗೊಳಿಸುವ ಸಂಬಂಧ ಜನವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹತೆ ಹೊಂದಿರುವ ಪೌರಕಾರ್ಮಿಕರ ತಾತ್ಕಾಲಿಕ ಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ. ಆದರೆ, ಈ ಪಟ್ಟಿಯಲ್ಲಿ ಹಲವು ಲೋಪದೋಷಗಳು ಕಂಡು ಬಂದಿದ್ದು, ಅರ್ಹತೆ ಇಲ್ಲದವರನ್ನೂ ಆಯ್ಕೆ ಮಾಡಲಾಗಿದೆ ಎಂದು ಪ್ರತಿಭಟನಾ ನಿರತ ಪೌರಕಾರ್ಮಿಕರು ಆರೋಪಿಸಿದ್ದಾರೆ.
ನೇಮಕಾತಿ ವೇಳೆ 48 ವರ್ಷ ಮೇಲ್ಪಟ್ಟ ಹಾಗೂ 55 ವರ್ಷದೊಳಗಿನ, ಹಾಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅರ್ಜಿ ಸಲ್ಲಿಕೆ ವೇಳೆ ತಿಳಿಸಲಾಗಿತ್ತು. ಆದರೆ, 2001ರಲ್ಲಿ ಜನಿಸಿದ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಅಭ್ಯರ್ಥಿಯೊಬ್ಬರನ್ನು ಆಯ್ಕೆ ಮಾಡಲಾಗಿದೆ. ಅದೇ ರೀತಿ 2000ರಲ್ಲಿ ಜನಿಸಿದ ಮೂವರು, 1999ರಲ್ಲಿ ಜನಿಸಿದ ಮೂವರು ಸೇರಿದಂತೆ 40 ವರ್ಷವೂ ದಾಟದ 150ಕ್ಕೂ ಹೆಚ್ಚಿನ ಅಭ್ಯರ್ಥಿಗಲನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 18 ಸಾವಿರ ಪೌರಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಕೇವಲ 3,673 ಪೌರಕಾರ್ಮಿಕರನ್ನು ಖಾಯಂಗೊಳಿಸುವುದರಿಂದ ಉಳಿದವರಿಗೆ ಅನ್ಯಾಯವಾಗಲಿದೆ. ಹಾಗಾಗಿ ಎಲ್ಲಾ ಪೌರಕಾರ್ಮಿಕರನ್ನು ಏಕಕಾಲಕ್ಕೆ ಖಾಯಂಗೊಳಿಸಬೇಕೆಂದು ಆಗ್ರಹಿಸಿದರು.