ಬೆಂಗಳೂರು: ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿ ಗಳನ್ನಾಗಿ ಮಾಡಲು ಉಚಿತ ಆಟೋ ಚಾಲನಾ ತರಬೇತಿ ನೀಡುತ್ತಿರುವುದು ಶ್ಲಾಘನೀಯ ವಾಗಿದ್ದು, ಸರ್ಕಾರದಿಂದಲೂ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ.
ಬಿ.ಪ್ಯಾಕ್ ಹಾಗೂ ಸಿಜಿಐ ಸಹಯೋಗದಲ್ಲಿ ಬಿಟಿಎಂ ಲೇಔಟ್ನಲ್ಲಿ ಆಯೋಜಿಸಿದ್ದ ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ಹಾಗೂ ಕೌಶಲ್ಯ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.
ಮಹಿಳೆಯರು ಹಾಗೂ ಮಂಗಳಮುಖಿಯರನ್ನು ಆರ್ಥಿಕವಾಗಿ ಬಲಪಡಿಸುವ ಕೆಲಸ ಮಾಡುತ್ತಿರುವುದು ಪ್ರಶಂಸನೀಯ. ಇಂದು ಬೆಂಗಳೂರಿನ ಯಾವುದೇ ಜಾಗಕ್ಕೆ ತೆರಳ ಬೇಕಿದ್ದರೂ ಆಟೋ ಅನಿವಾರ್ಯವಾಗಿದ್ದು, ಬೆಂಗಳೂರಿಗರ ಬೆನ್ನೆಲುಬಾಗಿ ನಿಂತಿದೆ. ಹೀಗಾಗಿ ಆಟೋ ಚಾಲಕರ ಸಮುದಾಯಕ್ಕೆ ಇನ್ನಷ್ಟು ಯೋಜನೆ ಹಾಗೂ ಸೌಲಭ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚಿಸಿ ರಾಜ್ಯ ಬಜೆಟ್ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾರ್ಯಕ್ರಮ ಆಯೋಜಕರು ಮಾತನಾಡಿ, ಈ ಯೋಜನೆಯಡಿ ಒಂಬತ್ತು ವಿಧಾನಸಭಾ ಕ್ಷೇತ್ರಗಳಲ್ಲಿ 500ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಪ್ರಮಾಣಿತ ಆಟೋ ಚಾಲಕರಾಗಿ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಕಾರ್ಯಕ್ರಮವನ್ನು ವಿಸ್ತರಿಸುವ ಯೋಜನೆ ಇದೆ ಎಂದು ತಿಳಿಸಿದರು.
