ಬೆಂಗಳೂರು: ಮೈಸೂರಿನ ಕೆ.ಆರ್.ನಗರದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಅವರು, ಸುದೀರ್ಘವಾದ ವಾದ – ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದ್ದಾರೆ.
ಇಬ್ಬರ ಶ್ಯೂರಿಟಿ , 5 ಲಕ್ಷ ರೂ. ಬಾಂಡ್, ಸಾಕ್ಷ್ಯಾಧಾರಗಳನ್ನು ನಾಶಪಡಿಸಬಾರದು ಹಾಗೂ ಎಸ್ ಐಟಿ ಅಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂಬ ಷರತ್ತು ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ನ್ಯಾಯಾಲಯದಿಂದ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಇಂದೇ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.