ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರು ಮುಂದಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಲಿದ್ದಾರೆ. ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರು ಮುಂದಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ (ಕಾಂಗ್ರೆಸ್) ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ತ್ರಿಸದಸ್ಯ ನೇಮಕಾತಿ ಸಮಿತಿಯು ಶನಿವಾರ ಅವರ ಹೆಸರನ್ನು ಅಂತಿಮಗೊಳಿಸಿದೆ.
ಸಮಿತಿಯ ಶಿಫಾರಸಿನ ಆಧಾರದ ಮೇಲೆ ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಸೂದ್ ಅವರ ನೇಮಕವನ್ನು ಅನುಮೋದಿಸಿದೆ ಎಂದು ವರದಿಯಾಗಿದೆ. ಆದರೂ ಆದೇಶಕ್ಕಾಗಿ ಕಾಯಲಾಗುತ್ತಿದೆ. ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು ಎರಡು ವರ್ಷಗಳಿಗೆ ನಿಗದಿಪಡಿಸಲಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಲು ಸೂದ್ ನಿರಾಕರಿಸಿದ್ದಾರೆ. ಸೂದ್ ಜೊತೆಗೆ ಸುಧೀರ್ ಸಕ್ಸೇನಾ (ಡಿಜಿಪಿ ಮಧ್ಯಪ್ರದೇಶ) ಮತ್ತು ತಾಜ್ ಹಾಸನ್ (ಅಗ್ನಿಶಾಮಕ ಸೇವೆಗಳು, ನಾಗರಿಕ ರಕ್ಷಣಾ ಮತ್ತು ಗೃಹರಕ್ಷಕ ದಳದ ಮುಖ್ಯಸ್ಥರು ನವದೆಹಲಿ) ಅವರ ಹೆಸರುಗಳು ಮುಂದಿನ ಸಿಬಿಐ ನಿರ್ದೇಶಕರ ಪಟ್ಟಿಯಲ್ಲಿವೆ.
ಸಿಬಿಐನ ಹಾಲಿ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಎರಡು ವರ್ಷಗಳ ಅಧಿಕಾರಾವಧಿಯು ಮೇ 25 ರಂದು ಕೊನೆಗೊಳ್ಳಲಿದ್ದು, ಅವರ ಜಾಗಕ್ಕೆ ಸೂದ್ ಅವರನ್ನು ನೇಮಕ ಮಾಡಲಾಗಿದೆ. 1985ರ ಐಪಿಎಸ್ ಬ್ಯಾಚ್ ನ ಸೂದ್
ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಕರ್ನಾಟಕ ಕೇಡರ್ನ ಮೂರನೇ ಐಪಿಎಸ್ ಅಧಿಕಾರಿಯಾಗಿದ್ದಾರೆ. ಹಿಮಾಚಲ ಪ್ರದೇಶಕ್ಕೆ ಸೇರಿದ ಸೂದ್ 2020 ಫೆಬ್ರವರಿ 1 ರಂದು ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿ ನೇಮಕಗೊಂಡಿದ್ದರು.