Home Uncategorized ರಸ್ತೆಯಲ್ಲಿ ದೇವಸ್ಥಾನ ನಿರ್ಮಿಸಿದರೆ ಜನರು ಏನು ಮಾಡಬೇಕು?: ಹೈಕೋರ್ಟ್ ಅಸಮಾಧಾನ

ರಸ್ತೆಯಲ್ಲಿ ದೇವಸ್ಥಾನ ನಿರ್ಮಿಸಿದರೆ ಜನರು ಏನು ಮಾಡಬೇಕು?: ಹೈಕೋರ್ಟ್ ಅಸಮಾಧಾನ

33
0

ಬೆಂಗಳೂರು: ನಗರದ ಸುಂಕದಕಟ್ಟೆ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಸ್ಥಾನ ನಿರ್ಮಾಣ ಮಾಡಿರುವ ಸಂಬಂಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಸಾರ್ವಜನಿಕ ರಸ್ತೆಯಲ್ಲಿ ಧಾರ್ಮಿಕ ಕೇಂದ್ರ ನಿರ್ಮಾಣ ಮಾಡಿದರೆ ಜನ ಏನು ಮಾಡಬೇಕು? ಎಂದು ಮೌಖಿಕವಾಗಿ ಪ್ರಶ್ನಿಸಿದೆ.

ರಸ್ತೆ ಒತ್ತುವರಿ ಮಾಡಿ ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರು ದೇವಸ್ಥಾನ ನಿರ್ಮಿಸುತ್ತಿರುವುದಕ್ಕೆ ಆಕ್ಷೇಪಿಸಿ ಸುಂಕದಕಟ್ಟೆಯ ನಿವಾಸಿ ಸಿ.ಹೊನ್ನಯ್ಯ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಸ್ವಾತಂತ್ರ ಪ್ರಾಧಿಕಾರರಿಂದ ಸ್ಪಷ್ಟವಾದ ವರದಿ ಪಡೆಯುವುದು ಸೂಕ್ತ ಎಂದೆನಿಸಿದೆ. ಸಂಬಂಧಿತ ಎಲ್ಲರಿಗೂ ನೋಟಿಸ್ ಜಾರಿ ಮಾಡಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ನೇಮಿಸಿದ ಭೂ ದಾಖಲೆಗಳ ಉಪ ನಿರ್ದೇಶಕರು(ಡಿಡಿಎಲ್‍ಆರ್) ತಾಂತ್ರಿಕ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ವಾಸ್ತವಿಕ ವರದಿಯನ್ನು ಮೂರು ವಾರಗಳಲ್ಲಿ ಸಲ್ಲಿಸಬೇಕು. ನೋಟಿಸ್ ಪಡೆದ ಸಂಬಂಧಿತರು ಸೂಕ್ತ ದಾಖಲೆಗಳನ್ನು ಡಿಡಿಎಲ್‍ಆರ್ ಅವರಿಗೆ ನೀಡಬೇಕು. ಡಿಡಿಎಲ್‍ಆರ್ ಅವರು ಸಂಬಂಧಿತ ಎಲ್ಲ ಸಾರ್ವಜನಿಕ ದಾಖಲೆಗಳನ್ನು ತರಿಸಿಕೊಂಡು ಪರಿಶೀಲಿಸಿ ಸಲ್ಲಿಸಬೇಕು ಎಂದು ಪೀಠ ತಿಳಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸರಕಾರಿ ರಸ್ತೆ ಒತ್ತುವರಿ ಮಾಡಿ ದೇವಸ್ಥಾನ ನಿರ್ಮಿಸುತ್ತಿರುವುದಲ್ಲದೇ ಓಡಾಟಕ್ಕೆ ರಸ್ತೆ ನಿರ್ಬಂಧಿ ಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ನ್ಯಾಯಪೀಠವು ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ, ದೇವಾಲಯ ನಿರ್ಮಿಸಲಾಗಿದೆಯೇ? ನಿಮ್ಮ (ಬಿಬಿಎಂಪಿ) ವರದಿ ಏನಿದೆ? ಸಾರ್ವಜನಿಕ ರಸ್ತೆಯನ್ನು ದೇವಸ್ಥಾನ ಅಥವಾ ಬೇರೆ ಪೂಜಾ ಸ್ಥಳ ನಿರ್ಮಿಸಲು ಬಳಸಬಹುದು ಎಂಬುದಕ್ಕೆ ದಾಖಲೆ ಎಲ್ಲಿದೆ? ನಾವು ಸಾರ್ವಜನಿಕ ಆಸ್ತಿಯ ರಕ್ಷಕರು. ಇದು ಖಾಸಗಿ ಆಸ್ತಿಯಲ್ಲ. ಸಾರ್ವಜನಿಕ ರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೇ ಜನರು ಏನು ಮಾಡಬೇಕು?. ಬಿಬಿಎಂಪಿ ಸಲ್ಲಿಸಿರುವ ಅಫಿಡವಿಟ್‍ನಲ್ಲಿ ಒತ್ತುವರಿಯಾಗಿದೆ ಉಲ್ಲೇಖಿಸಿದ್ದೀರಿ? ಸಾರ್ವಜನಿಕ ಸ್ಥಳದಲ್ಲಿ ದೇವಾಲಯ ನಿರ್ಮಿಸಿದ್ದರೆ ನಾವು ಅದನ್ನು ಸಹಿಸುವುದಿಲ್ಲ ಎಂದು ತಿಳಿಸಿತು.

LEAVE A REPLY

Please enter your comment!
Please enter your name here