ರಾಜ್ಯದಲ್ಲಿ ಮಹಾಮಾರಿ ಕೊರೋನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ. ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.
ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲಾ ಐಎಲ್ಐ (ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ) ಮತ್ತು ಸಾರಿ (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹಾಗೆಯೇ ರೋಗ ಲಕ್ಷಣವುಳ್ಳ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲಾವಾರು ಪರೀಕ್ಷೆ ಗುರಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ತಲುಪಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ನಿಗದಿಪಡಿಸಲಾದ ಕೋವಿಡ್ ಪರೀಕ್ಷೆ ಗುರಿಯಲ್ಲಿ ಶೇ 70ರಷ್ಟು ಪರೀಕ್ಷೆಗಳನ್ನು ಆರ್ಟಿ–ಪಿಸಿಆರ್ ವಿಧಾನದ ಮೂಲಕ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಬೇಕು. ಶೇ 30ರಷ್ಟು ಪರೀಕ್ಷೆಗಳನ್ನು ರ್ಯಾಟ್ ಮಾದರಿಯಲ್ಲಿ ಮಾಡಬೇಕು ಎಂದು ಹೇಳಲಾಗಿದೆ.
ರಾಜ್ಯದ ಪ್ರಯೋಗಾಲಯದಲ್ಲಿ ಕಳೆದ 10 ದಿನಗಳಲ್ಲಿ ಪ್ರತಿನಿತ್ಯ ಸರಾಸರಿ 7,729 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಸರಾಸರಿಶೇ 3.53 ರಷ್ಟಿದೆ. ಬೆಂಗಳೂರಿನಲ್ಲಿ ಸರಾಸರಿ 1,979 ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೋಂಕು ದೃಢ ಪ್ರಮಾಣ ಶೇ 7.51ಕ್ಕೆ ತಲುಪಿದೆ. ಬಳ್ಳಾರಿಯಲ್ಲಿ ಶೇ 7.95, ಶಿವಮೊಗ್ಗದಲ್ಲಿ ಶೇ 6.2, ದಾವಣಗೆರೆಯಲ್ಲಿ ಶೇ 6.09, ಮೈಸೂರಿನಲ್ಲಿ ಶೇ 5.07, ಚಿಕ್ಕಮಗಳೂರಿನಲ್ಲಿ ಶೇ 4.34ರಷ್ಟು ದೃಢಪ್ರಮಾಣ ವರದಿಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಈ ಪ್ರಮಾಣ ಶೇ 4ಕ್ಕಿಂತ ಕಡಿಮೆಯಿದೆ.
ಬೆಂಗಳೂರಿನಲ್ಲಿ ಪರೀಕ್ಷೆ ಗುರಿಯನ್ನು 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದೇ ರೀತಿ ಉಳಿದ ಜಿಲ್ಲೆಗಳಿಗೂ ಪರೀಕ್ಷೆಯ ಗುರಿಯನ್ನು ಎರಡು ಮೂರು ಪಟ್ಟು ಹೆಚ್ಚಿಸಲಾಗಿದೆ. ಶಿವಮೊಗ್ಗ, ಕೊಡಗು ಹಾಗೂ ಹಾವೇರಿಯಲ್ಲಿ ಈಗಾಗಲೇ ನಿಗದಿತ ಗುರಿಗಿಂತ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.