Home ರಾಜಕೀಯ ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳಿಗೆ ಅನುಮೋದನೆ ನೀಡಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸಿಎಂ ಸಿದ್ದರಾಮಯ್ಯ...

ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳಿಗೆ ಅನುಮೋದನೆ ನೀಡಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸಿಎಂ ಸಿದ್ದರಾಮಯ್ಯ ಮನವಿ

9
0

ನವ ದೆಹಲಿ: ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸರಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೆ ಅನುಮೋದನೆ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ.

ಶುಕ್ರವಾರ ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಬೆಳಗಾವಿ–ಹುನಗುಂದ-ರಾಯಚೂರು(ಎನ್.ಎಚ್.748ಎ), ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿ, ಸೂರತ್-ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ, ಗ್ರೀನ್‍ಫೀಲ್ಡ್ ಕಾರಿಡಾರ್‍ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೇಂದ್ರ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದ ಅವರು, ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

ಪ್ರಸ್ತಾವನೆಯಲ್ಲಿ ಸಲ್ಲಿಸಲಾಗಿರುವ ಇತರ ಪ್ರಮುಖ ವಿಷಯಗಳು: ದಿನಕ್ಕೆ 10 ಸಾವಿರ ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಿಸಬೇಕು. ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸಬೇಕು. ಮೈಸೂರು ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಕೊಲಂಬಿಯ ಏಷ್ಯಾ ಆಸ್ಪತ್ರೆ)ನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಲಾಗಿದೆ.

ಮೈಸೂರು ರಿಂಗ್ ರಸ್ತೆಯಲ್ಲಿ ಎನ್.ಎಚ್.-275ಕೆ ನಲ್ಲಿ 9 ಗ್ರೇಡ್ ಸೆಪರೇಟರುಗಳ ನಿರ್ಮಾಣಕ್ಕೆ ಅನುಮೋದನೆ ನೀಡಬೇಕು. ಬೆಳಗಾವಿ ನಗರದಲ್ಲಿ ಹಳೆ ಎನ್.ಎಚ್.4 ನಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಬೇಕು. ಬೆಳಗಾವಿ ಜಿಲ್ಲೆಯ ಗೋಕಾಕ್ ಜಲಪಾತದಲ್ಲಿ ಕೇಬಲ್ ಕಾರ್ ಸೌಲಭ್ಯ ಕಲ್ಪಿಸುವ ಯೋಜನೆಗೆ ಅನುಮತಿ ನೀಡುವಂತೆ ಕೋರಲಾಗಿದೆ.

ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯನ್ನು ಸುಧಾರಣೆ ಮಾಡಬೇಕು. ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್ ನಿರ್ಮಾಣ ಮಾಡಬೇಕು. ಎನ್.ಎಚ್.-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಮಾಡಬೇಕು. ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ ಎನ್.ಎಚ್.-150ಎ ಅನ್ನು ಒಂದು ಬಾರಿ ಸುಧಾರಣೆ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಎನ್.ಎಚ್.-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ ಹಾಗೂ ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸಬೇಕು. ಈಗಾಗಲೇ ತಾತ್ವಿಕ ಅನುಮೋದನೆ ದೊರೆತಿರುವ ಕೇರಳದ ಕಲ್ಪೆಟ್ಟದಿಂದ ಮಾನಂದವಾಡಿ, ಎಚ್.ಡಿ.ಕೋಟೆ, ಜಯಪುರ ಮೂಲಕ ಮೈಸೂರನ್ನು ಸಂಪರ್ಕಿಸುವ 90 ಕಿ.ಮೀ. ಹೆದ್ದಾರಿ ಅನ್ನು ಉನ್ನತೀಕರಿಸಬೇಕು ಎಂದು ಕೋರಲಾಗಿದೆ.

ಮೈಸೂರಿನಿಂದ ಬನ್ನೂರು ಮೂಲಕ ಮಳವಳ್ಳಿಯನ್ನು ಸಂಪರ್ಕಿಸುವ 45 ಕಿ.ಮೀ. ಹೆದ್ದಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಂಕೇಶ್ವರದಿಂದ ಗೋಕಾಕ್-ಯರಗಟ್ಟಿ-ಮನ್ವಳ್ಳಿ ಮೂಲಕ ನರಗುಂದ ವನ್ನು ಸಂಪರ್ಕಿಸುವ 127 ಕಿ.ಮೀ. ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ಮುಖ್ಯಮಂತ್ರಿ ಮನವಿ ಮಾಡಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ರಾಜ್ಯ ಸರಕಾರದ ದಿಲ್ಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ ಸೇರಿದಂತೆ ಇನ್ನಿತರರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here