ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಮುಂದಿನ ಮೂರು ವಾರಗಳಲ್ಲಿ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವುದಾಗಿ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಅಧ್ಯಕ್ಷ ಮತ್ತು ಸದಸ್ಯ ನೇಮಕಕ್ಕೆ ನಿರ್ದೇಶನ ಕೋರಿ ಬೆಂಗಳೂರಿನ ಮ್ಯಾಥ್ಯೂ ಥಾಮಸ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಸರಕಾರದ ಪರ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ರೇರಾದ ಒಬ್ಬ ಸದಸ್ಯರು 2024ರ ಏಪ್ರಿಲ್ ತಿಂಗಳಲ್ಲಿ ನಿವೃತ್ತರಾಗಲಿದ್ದಾರೆ. ಆ ಹುದ್ದೆಯೂ ಸೇರಿದಂತೆ ಅಧ್ಯಕ್ಷರೂ ಸೇರಿದಂತೆ ಎಲ್ಲ ಸದಸ್ಯರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದರು.
ಈ ಹೇಳಿಕೆ ದಾಖಲಿಸಿಕೊಂಡ ಪೀಠ, ರೇರಾದ ಅಧ್ಯಕ್ಷರು ಮತ್ತು ಸದಸ್ಯರ ನೇಮಕದಲ್ಲಿ ಯಾವುದೇ ರೀತಿಯ ವಿಳಂಬವಿಲ್ಲದೆ ನೇಮಕ ಮಾಡುವ ಪ್ರಕ್ರಿಯೆ ಪ್ರಾರಂಭಿಸಬೇಕು. ಯಾವುದೇ ರೀತಿಯ ವಿಳಂಬ ಮಾಡಬಾರದು ಎಂದು ಪೀಠ ತಿಳಿಸಿ ವಿಚಾರಣೆಯನ್ನು ಮುಂದೂಡಿದೆ.