ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್-ಎಚ್ಎಸ್ಆರ್ಪಿ) ಉತ್ಪಾದಕರಿಗೆ ಒಪ್ಪಿಗೆ ನೀಡುವ ನಿಟ್ಟಿನಲ್ಲಿ ವಾಹನ ತಯಾರಕರಿಗೆ ಕಾಲಮಿತಿ ನಿಗದಿಪಡಿಸಿ‘ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಬೆಂಗಳೂರು: ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್-ಎಚ್ಎಸ್ಆರ್ಪಿ) ಉತ್ಪಾದಕರಿಗೆ ಒಪ್ಪಿಗೆ ನೀಡುವ ನಿಟ್ಟಿನಲ್ಲಿ ವಾಹನ ತಯಾರಕರಿಗೆ ಕಾಲಮಿತಿ ನಿಗದಿಪಡಿಸಿ‘ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
‘ಈ ಸಂಬಂಧದ ಅಧಿಸೂಚನೆಗೆ ತಡೆ ನೀಡಬೇಕು‘ ಎಂದು ಕೋರಿ, ‘ಅತಿ ಸುರಕ್ಷಿತ ನೋಂದಣಿ ಫಲಕಗಳ ಭಾರತೀಯ ಉತ್ಪಾದಕರ ಒಕ್ಕೂಟ‘ ಸೇರಿದಂತೆ ಕೆಲ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
‘2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳು 90 ದಿನಗಳ ಒಳಗಾಗಿ ಹೊಸ ಪರವಾನಗಿ ನೋಂದಣಿ ಫಲಕ ಹೊಂದಬೇಕು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವ ಕಾರಣ ಈ ನಿಟ್ಟಿನಲ್ಲಿನ ಒಪ್ಪಿಗೆ ಪ್ರಕ್ರಿಯೆಯು ಕಾಲಮಿತಿಯಲ್ಲಿ ನಡೆಯಬೇಕು‘ ಎಂದು ಹೇಳಿತು. ಏತನ್ಮಧ್ಯೆ, ರಾಜ್ಯ ಸರ್ಕಾರದ ಅಧಿಸೂಚನೆಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಕೋರಿಕೆಯನ್ನು ತಿರಸ್ಕರಿಸಿತು.
ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮುನ್ನ ನೋಂದಣಿಯಾದ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸಲು ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್ಗಳ ಮೂಲಕ ಅಳವಡಿಸಿಕೊಳ್ಳಲು ಸರ್ಕಾರ ಆ.17ರಂದು ಅಸೂಚನೆ ಹೊರಡಿಸಿದೆ. ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಅರ್ಜಿದಾರ ಸಂಸ್ಥೆಯನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಕೆಲವು ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್ಎಸ್ಆರ್ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಅರ್ಜಿದಾರ ಸಂಸ್ಥೆ ಅರ್ಜಿಯಲ್ಲಿ ಆರೋಪಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರ, ಆ ವಾದವನ್ನು ಅಲ್ಲಗಳೆದು ಅಂತಹ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿತ್ತು.