ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ 40-45 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ 40-45 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.
ಪಕ್ಷದ ಮುಖಂಡರ ಸಭೆ ಕರೆದಿರುವ ಪವಾರ್, ಕರ್ನಾಟಕದ ಚುನಾವಣೆ ಬಗ್ಗೆ ತನ್ನ ಯೋಜನೆಗಳನ್ನು ಅಂತಿಮಗೊಳಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಗೋವಾ, ಮೇಘಾಲಯ, ಮಣಿಪುರಗಳಲ್ಲಿ ಸೋಲು ಕಂಡು ತನ್ನ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಕಳೆದುಕೊಂಡಿರುವ ಎನ್ ಸಿಪಿ ಈ ಚುನಾವಣೆಯ ಮೂಲಕ ಮತ್ತೆ ರಾಷ್ಟ್ರೀಯ ಪಕ್ಷ ಸ್ಥಾನ ಗಿಟ್ಟಿಸಿಕೊಳ್ಳುವ ಯತ್ನ ನಡೆಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕರ್ನಾಟಕ ವಿಧಾನಸಭಾ ಚುನಾಣೆಗೆ ಅಲಾರಮ್ ಗಡಿಯಾರವನ್ನು ಪಕ್ಷದ ಚಿಹ್ನೆಯನ್ನು ನೀಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಚುನಾವಣಾ ಆಯೋಗ ಒಪ್ಪಿಗೆ ನೀಡಿದೆ.
224 ಕ್ಷೇತ್ರಗಳ ಪೈಕಿ ಕನಿಷ್ಟ 40-45 ಕ್ಷೇತ್ರಗಳಲ್ಲಿ ಎನ್ ಸಿ ಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಹಾಗೂ ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬೆಂಬಲ ನೀಡಲಿದೆ.
ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರೊಂದಿಗೆ ಸಭೆ ನಡೆಸಿದ ಬಳಿಕ ಪವಾರ್ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಘೋಷಣೆ ಮಾಡಿರುವುದು ಮಹತ್ವ ಪಡೆದುಕೊಂಡಿದೆ.