ಶಿವಮೊಗ್ಗ: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಕಣ್ಣಿಗೆ ಎಣ್ಣೆ ಬಿಡ್ಕೊಂಡು ಯಾತ್ರೆ, ಸಮಾವೇಶಗಳನ್ನು ಮಾಡಿ ಜನರ ಮನ ಮುಟ್ಟುತ್ತಿದ್ದಾರೆ. ಜಿಲ್ಲೆಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ವಿಚಾರವೇ ಚುನಾವಣಾ ಅಸ್ತ್ರವಾಗಿದೆ. ಸಂತ್ರಸ್ತರ ಸಮಸ್ಯೆ ಮುಂದಿಟ್ಟು ರಾಜಕೀಯ ಲಾಭ ಮಾಡಿಕೊಳ್ಳಲು ರಾಜಕೀಯ ಪಕ್ಷಗಳು ಮುಂದಾಗಿವೆ. ಶರಾವತಿ ಸಂತ್ರಸ್ತರ ಸಮಸ್ಯೆ ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಇಂದು ಕಾಂಗ್ರೆಸ್ ಹೋರಾಟಕ್ಕೆ ಇಳಿದಿದೆ.
ರಾಜ್ಯ ಸರ್ಕಾರ, ಶರಾವತಿ ಸಂತ್ರಸ್ತರಿಗೆ ನೀಡಿದ ಹಕ್ಕುಪತ್ರ ವಜಾ ಮಾಡಿದೆ. ಇದೇ ವಿಷಯಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಇಂದು ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಶಿವಮೊಗ್ಗದ ಆಯನೂರಿನಿಂದ ಶಿವಮೊಗ್ಗದವರೆಗೆ 20 ಕಿ.ಮೀ ಪಾದಯಾತ್ರೆ ನಡೆಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ. ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಆಯನೂರಿನಿಂದ ಪಾದಯಾತ್ರೆ ಆರಂಭವಾಗಲಿದೆ. ಸಂಜೆ 4 ಗಂಟೆಗೆ ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಸಂತ್ರಸ್ತರ ಸಮಾವೇಶ ಆಯೋಜಿಸಲಾಗಿದ್ದು ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಿಕೆ ಹರಿಪ್ರಸಾದ್, ಧ್ರವ್ ನಾರಾಯಣ್ ಸೇರಿದಂತೆ ರಾಜ್ಯದ ಬಹುತೇಕ ಕೈ ನಾಯಕರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: Bharat Jodo Yatra: ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತವಾಗಿ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ಗೆ ಗಾಯ
1960ರ ದಶಕದಿಂದಲೂ ಶರಾವತಿ ಸಂತ್ರಸ್ತರು ಇದೇ ಸಮಸ್ಯೆ ಅನುಭವಿಸುತ್ತಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನಲ್ಲಿ ಲಿಂಗನಮಕ್ಕಿ ಡ್ಯಾಂ ನಿರ್ಮಾಣದ ವೇಳೆ ಅನೇಕರು ತಮ್ಮ ಮನೆ- ಜಮೀನು ಕಳೆದುಕೊಂಡಿದ್ದರು. ಡ್ಯಾಂ ನಿರ್ಮಾಣದ ವೇಳೆ ಸುಮಾರು 1 ಲಕ್ಷಕ್ಕೂ ಅಧಿಕ ಹೆ. ಅರಣ್ಯಭೂಮಿ ಮುಳುಗಡೆಯಾಗಿತ್ತು. ಜಲಾಶಯ ನಿರ್ಮಾಣಕ್ಕೆ ಸರ್ಕಾರ ಸುಮಾರು 10 ಸಾವಿರ ಕುಟುಂಬಗಳನ್ನು ಒಕ್ಕಲೆಬ್ಬಿಸಿತ್ತು. ಅಂದಿನ ಶರಾವತಿ ಸಂತ್ರಸ್ತರಿಗೆ ಈವರೆಗೂ ಸೂಕ್ತ ಪರಿಹಾರ ಸಿಕ್ಕಿಲ್ಲ. ಅಂದಿನ ಸರ್ಕಾರ 1959 ರಿಂದ 1969 ರವರೆಗೆ ಸಂತ್ರಸ್ತರಿಗೆ 9934 ಎಕರೆ ಬಿಡುಗಡೆ ಮಾಡಿತ್ತು. ಬಿಡುಗಡೆ ಮಾಡಿದ್ದ ಅರಣ್ಯ ಭೂಮಿ ಕಂದಾಯ ಇಲಾಖೆಗೆ ಹಸ್ತಾಂತರಿಸಿದ ಹಿನ್ನೆಲೆ ಸಂತ್ರಸ್ತರಿಗೆ ಭೂಮಿ ಸಿಕ್ಕಿಲ್ಲ. ಐದಾರು ದಶಕದಿಂದ ಭೂಮಿ ಹಕ್ಕಿಗೆ ಹೋರಾಟ ಮಾಡುತ್ತಲೇ ಇದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ