Home ಕರ್ನಾಟಕ ಸಿಎಂ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ : 17,835 ಕೋಟಿ...

ಸಿಎಂ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ : 17,835 ಕೋಟಿ ರೂ.ಮೊತ್ತದ ಯೋಜನೆಗಳಿಗೆ ಹಸಿರು ನಿಶಾನೆ

20
0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 63ನೇ ಸಭೆಯಲ್ಲಿ ರಾಜ್ಯ ವ್ಯಾಪಿ 27,067 ಉದ್ಯೋಗ ಸೃಷ್ಟಿಸುವ 17,835 ಕೋಟಿ ರೂ.ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅನುಮೋದನೆಗೊಂಡ ಯೋಜನೆಗಳ ಪೈಕಿ 8,220ಕೋಟಿ ರೂ.ಮೊತ್ತದ 6 ಹೊಸ ಯೋಜನೆಗಳು ಮತ್ತು 9,615 ಕೋಟಿ ರೂ. ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ. ಉತ್ತರ ಕರ್ನಾಟಕ ಭಾಗದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ 10,433 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಸಿದ್ದರಾಮಯ್ಯ ಪ್ರಕಟಿಸಿದರು.

ಅದರಲ್ಲೂ, ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಕಂಪೆನಿಯಲ್ಲಿ 2,095 ಕೋಟಿ ರೂ.ವೆಚ್ಚದಲ್ಲಿ ಸ್ಮಾರ್ಟ್‍ಫೋನ್ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21,723 ಜನರಿಗೆ ಉದ್ಯೋಗಗಳು ದೊರೆಯಲಿವೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯದಲ್ಲಿ ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‍ಮೆಂಟ್ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‍ನ ಒಟ್ಟು 8,220ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಸಭೆಯಲ್ಲಿ ಉಲ್ಲೇಖಿಸಲಾಯಿತು.

ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪೆನಿಗಳ ಸಾಮರ್ಥ್ಯ ವಿಸ್ತರಣೆ ಉದ್ದೇಶದ ಹೆಚ್ಚುವರಿ ಹೂಡಿಕೆಯ 8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಬಂಡವಾಳ ಹೂಡಿಕೆ ಹೆಚ್ಚಳದ ಪ್ರಸ್ತಾವನೆಗಳಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‍ಬಿಎಸ್‍ಎಸ್‍ಎನ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಎಂವೆ ಫೋಟೊ ವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್), ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ), ಗ್ರೀನ್ಕೊ ಕೆಎ01 ಐಆರ್ ಇಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋಲಾರ್ ಎನರ್ಜಿ ಪ್ರೈವೇಟ್ ಲಿಮಿಟೆಡ್), ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನ್‍ಫ್ರಾ ಲಿಮಿಟೆಡ್ ಮತ್ತು ಸ್ನೈಡರ್ ಎಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು 9,615ಕೋಟಿ ರೂ.ಗಳಷ್ಟಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನಿಂದ 1,352.3 ಕೋಟಿ ರೂ. ವೆಚ್ಚದಲ್ಲಿ ಡೇಟಾ ಸೆಂಟರ್ ನಿರ್ಮಾಣ. 250 ಉದ್ಯೋಗ ನಿರೀಕ್ಷೆ ಮಾಡಲಾಗಿದೆ.

ವಿಜಯಪುರ ಜಿಲ್ಲೆ ಕಂಬಾಗಿ ಹಾಗೂ ಶೇಗುಣಶಿ ಗ್ರಾಮಗಳ ವ್ಯಾಪ್ತಿಯಲ್ಲಿ ಇಂಡಿಯನ್ ಕೇನ್ ಪವರ್ ಲಿಮಿಟೆಡ್‍ನಿಂದ 1078 ಕೋಟಿ ವೆಚ್ಚದಲ್ಲಿ ಸಕ್ಕರೆ ಕಾರ್ಖಾನೆ, 309 ಉದ್ಯೋಗ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಯರಗಲ್‍ನಲ್ಲಿ ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್‍ನಿಂದ 494 ಕೋಟಿ ರೂ.ಹೂಡಿಕೆಯಲ್ಲಿ ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ವೃದ್ಧಿಯಿಂದ 1085 ಉದ್ಯೋಗ ಸೃಷ್ಟಿಯಾಗಬಹುದು ಎಂದು ಸಭೆಯಲ್ಲಿ ತಿಳಿಸಲಾಯಿತು.

ಸಭೆಯಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here