Home ನವ ದೆಹಲಿ 16th Finance Commission |  ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಲು ಒತ್ತಾಯಿಸಿದೆ:...

16th Finance Commission |  ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಲು ಒತ್ತಾಯಿಸಿದೆ: ಸಿಎಂ ಸಿದ್ದರಾಮಯ್ಯ

32
0
16th Finance Commission | Strengthen the federal system and demand justice for all states: CM Siddaramaiah

ನವ ದೆಹಲಿ, ಜೂನ್ 13: 16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆಗೆ ಜೊತೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಒತ್ತಿ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು 16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಿದ್ದರು.

16 ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪರಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಆಯೋಗಕ್ಕೆ ಸಲ್ಲಿಸಲಾಗಿದೆ ಎಂದರು.

ಯಾರಿಗೂ ಅನ್ಯಾಯವಾಗಬಾರದು 2011-2012 ರಲ್ಲಿ ಕರ್ನಾಟಕ ರಾಜ್ಯವು ಜಿಡಿಪಿಗೆ ಶೇ 7ರಷ್ಟು ಕೊಡುಗೆ ನೀಡಿದ್ದರೆ, 2024-25 ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟುಕೊಡುಗೆ ನೀಡುತ್ತಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 5 ರಷ್ಟಿದ್ದೇವೆ. 5 ವಷರ್ಗಳಿಗೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಸಂವಿಧಾನದ ಅನುಚ್ಛೇದ 180 ಪ್ರಕಾರ ತೆರಿಗೆ ಹಂಚಿಕೆಯಾಗಬೇಕೆಂದು ಹೇಳಲಾಗಿದ್ದು ಯಾರಿಗೂ ಅನ್ಯಾಯವಾಗಬಾರದೆಂದು ಸ್ಪಷ್ಟಪಡಿಸಿದೆ ಎಂದರು.

5 ವರ್ಷಗಳಲ್ಲಿ ರಾಜ್ಯದ ಪಾಲು ಒಟ್ಟು 68,275 ಕೋಟಿ ರೂ.ಗಳು ಕಡಿಮೆಯಾಗಿದೆ ಕರ್ನಾಟಕ ರಾಜ್ಯ ಪ್ರತಿ ವರ್ಷ 4.5 ಲಕ್ಷ ಕೋಟಿ ತೆರಿಗೆ ನೀಡುತ್ತದೆ. ಒಂದು ರೂ.ಗಳು ನೀಡಿದರೆ 15 ಪೈಸೆ ನಮಗೆ ವಾಪಸ್ಸು ಬರುತ್ತದೆ. ಈ ಅನ್ಯಾಯ 16 ನೇ ಹಣಕಾಸು ಆಯೋಗದಲ್ಲಿ ಆಗಬಾರದು. 14 ನೇ ಹಣಕಾಸು ಆಯೋಗದಲ್ಲಿ ನಮ್ಮ ತೆರಿಗೆ ಪಾಲು 4.713% ಕ್ಕೆ ಮತ್ತು 15 ನೇ ಹಣಕಾಸು ಆಯೋಗದಲ್ಲಿ ತೆರಿಗೆ ಪಾಲು 3.647% ಕ್ಕೆಇಳಿಕೆ ಮಾಡಿದ್ದರಿಂದ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲನ್ನು ಒಟ್ಟಾರೆ 23% ರಷ್ಟು ಇಳಿಕೆ ಮಾಡಲಾಗಿದೆ. 5 ವರ್ಷಗಳಲ್ಲಿ ಒಟ್ಟು 68,275 ಕೋಟಿ ರೂ.ಗಳು ಕಡಿಮೆಯಾಗಿದೆ ಎಂದರು.

ಸೆಸ್ ಮತ್ತು ಸರ್ಚಾಜ್ ಶೇ 5ರಷ್ಟನ್ನು ಮೀರಬಾರದು ಇದರೊಂದಿಗೆ ಕೇಂದ್ರ ಸರ್ಕಾರ ಸೆಸ್ ಮತ್ತು ಸರ್ಜಾರ್ಜ್ ನಲ್ಲಿ ನಮಗೆ ಮಾತ್ರವಲ್ಲ ಯಾವ ರಾಜ್ಯಕ್ಕೂ ಪಾಲು ಕೊಡುವುದಿಲ್ಲ. ಕರ್ನಾಟಕದಿಂದ 2024-25ರಲ್ಲಿ ಒಟ್ಟು 5,41,709 ಕೋಟಿ ಸಂಗ್ರಹವಾಗಿದೆ. 8,084 ಕೋಟಿ ರೂ.ಗಳು ಕರ್ನಾಟಕ್ಕೆ ನಷ್ಟವಾಗಿದೆ. ಸೆಸ್ ಮತ್ತು ಸರ್ಚಾಜ್ ಶೇ 5ರಷ್ಟನ್ನು ಮೀರಬಾರದು, ಒಂದು ವೇಳೆ 5% ಮೀರಿದರೆ ರಾಜ್ಯಗಳ ತೆರಿಗೆ ಹಂಚಿಕೆಯ ಪಾಲಿನಲ್ಲಿ ಶೇ 50 ರಷ್ಟು ಹೆಚ್ಚಳ ಮಾಡಬೇಕು, ಎಂದು ಮನವಿ ಮಾಡಲಾಗಿದೆ ಎಂದರು.

ತೆರಿಗೆ ನ್ಯಾಯಯುತವಾಗಿ ಹಂಚಿಕೆಯಾಗಬೇಕು ಕರ್ನಾಟಕ ಆರ್ಥಿಕವಾಗಿ ಬೆಳವಣಿಗೆಯಾದರೆ ಕೇಂದ್ರ ಸರ್ಕಾರದ ಬೆಳವಣಿಗೆಯೂ ಆಗುತ್ತದೆ. ಹಾಗಾಗಿ ನ್ಯಾಯಯುತವಾಗಿ ಹಂಚಿಕೆಯಾಗಬೇಕು ಎಂದು ಕೋರಲಾಗಿದೆ ಎಂದರು.

ರಾಜಸ್ವ ಕೊರತೆ ಅನುದಾನ ರಾಜ್ಯಕ್ಕಿಲ್ಲ ರಾಜ್ಯದ ತಲಾದಾಯವು ಆರು ಜಿಲ್ಲೆಗಳನ್ನು ಹೊರತುಪಡೆಸಿ ಕಡಿಮೆಯಿದೆ. ಕಲ್ಯಾಣ ಕರ್ನಾಟಕದಲ್ಲಿ ಇನ್ನೂ ಕಡಿಮೆಯಿದ್ದು, ಇದು ರಾಜಸ್ಥಾನ, ಒರಿಸ್ಸಾ ಮತ್ತು ಪಶ್ಚಿಮ ಬಂಗಾಲದ ಸರಿಸಮಾನವಾಗಿದೆ. ರಾಜಸ್ವ ಕೊರತೆ ಇರುವ ರಾಜ್ಯಗಳಿಗೆ ಈ ಕೊರತೆಯನ್ನು ತುಂಬಲು ಅನುದಾನವನ್ನು ನೀಡಲಾಗುತ್ತದೆ. ಆದರೆ ತೆರಿಗೆ ಹಂಚಿಕೆಯಲ್ಲಿ ನಮ್ಮಷ್ಟೇ ನಷ್ಟವಾಗಿರುವ ಕೇರಳಕ್ಕೆ ಕಳೆದ ವರ್ಷ 38000 ಕೋಟಿಗಳನ್ನು ರಾಜಸ್ವ ಕೊರತೆ ತುಂಬಲು ಒದಗಿಸಲಾಗಿದೆ. ಕರ್ನಾಟಕಕ್ಕೆ ಯಾವುದೇ ರಾಜಸ್ವ ಕೊರತೆ ಅನುದಾನ ಬಂದಿಲ್ಲ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ವಿಶೇಷ ಅನುದಾನವನ್ನು ಒದಗಿಸಲು ನಿರಾಕರಿಸಿತು 15 ನೇ ಹಣಕಾಸಿನ ಆಯೋಗವು ರಾಜ್ಯಕ್ಕೆ 5495 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಕರ್ನಾಟಕ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಒದಗಿಸಬೇಕೆಂದು ಶಿಫಾರಸ್ಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಈ ಅನುದಾನವನ್ನು ಒದಗಿಸಲು ನಿರಾಕರಿಸಿತು. ಇದಲ್ಲದೇ ಪೆರಿಫೆರಲ್ ರಿಂಗ್ ರಸ್ತೆ ಗೆ 3000 ಕೋಟಿ ಹಾಗೂ ಕೆರೆಗಳ ಅಭಿವೃದ್ಧಿಗೆ 3000 ಕೋಟಿ ನೀಡಬೇಕೆಂದು ಶಿಫಾರಸ್ಸು ಮಾಡಿತ್ತು. ಎರಡೂ ಸೇರಿ 11495 ಕೋಟಿ ರೂ.ಗಳನ್ನು ಒದಗಿಸಬೇಕೆಂದು 15 ನೇ ಹಣಕಾಸಿನ ಆಯೋಗವು ಶಿಫಾರಸ್ಸು ಮಾಡಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಬೆಂಗಳೂರು ಅಭಿವೃದ್ಧಿಗೆ 1.ಲಕ್ಷ 15 ಸಾವಿರ ಕೋಟಿ ಒದಗಿಸಲು ಮನವಿ ಬೆಂಗಳೂರು ನಗರ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ನಮ್ಮ ಮನವಿಯಲ್ಲಿ ಕೋರಿರುವಂತೆ ಅನುದಾನವನ್ನು ಒದಗಿಸದೇ ಹೋದರೆ ಬೆಂಗಳೂರು ಅಭಿವೃದ್ಧಿಗೆ 1.ಲಕ್ಷ 15 ಸಾವಿರ ಕೋಟಿಗಳನ್ನು ಒದಗಿಸಬೇಕು ಎಂದು ಕೋರಿದೆ ಎಂದರು.

ವಿಶೇಷ ಅನುದಾನ ಒದಗಿಸಿ ಕಲ್ಯಾಣ ಕರ್ನಾಟಕದಲ್ಲಿ ಏಳು ಜಿಲ್ಲೆಗಳನ್ನು ಒಳಗೊಂಡಿದ್ದು 5 ಜಿಲ್ಲೆಗಳ ವಾರ್ಷಿಕ ವರಮಾನವು ರಾಜಸ್ಥಾನ,ಬಿಹಾರ, ಉತ್ತರ ಪ್ರದೇಶ, ಒರಿಸ್ಸಾ ಮತ್ತು ಪಶ್ಚಿಮ ಬಂಗಾಲದ ಸರಿಸಮಾನವಿದೆ. ಮಲೆನಾಡು ಪ್ರದೇಶಗಳಲ್ಲಿ ನಮಗೆ ಪ್ರವಾಹ, ಭೂ ಕುಸಿತದಂತಹ ಸಮಸ್ಯೆಗಳು ತಲೆದೋರುತ್ತವೆ. ಅದ್ದರಿಂದ ವಿಶೇಷ ಅನುದಾನ ಒದಗಿಸಬೇಕು ಎಂದು ಕೋರಿದೆ.

ವಿವೇಚನಾ ಅನುದಾನವು 0.3% ಗಿಂತ ಹೆಚ್ಚಾಗಬಾರದು ಕೇಂದ್ರ ಸರ್ಕಾರದ ವಿವೇಚನಾ ಅನುದಾನವು 0.3% ಗಿಂತ ಹೆಚ್ಚಾಗಬಾರದು ಎಂದು ಮನವಿ ಮಾಡಲಾಗಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮೂರು ಮಾನದಂಡಗಳ ಪ್ರಕಾರ ನಡೆದುಕೊಂಡಿರುವ ಕರ್ನಾಟಕ ರಾಜ್ಯ . ಹಾಗಾಗಿ ಆರ್ಥಿಕವಾಗಿ ರಾಜ್ಯ ಸದೃಢವಾಗಿದೆ ಎಂದು ಆಯೋಗದ ಗಮನಕ್ಕೆ ತರಲಾಗಿದೆ. ಹೆಚ್ಚುವರಿ ಮನವಿಯಲ್ಲಿಯೂ ಹೇಳಲಾಗಿದೆ. ಇದೊಂದು ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸುವ ಕೆಲಸವಾಗಬೇಕು. ಕರ್ನಾಟಕಕ್ಕೆ ಅನ್ಯಾಯವಾಗಬಾರದು ಎಂದು ಕೋರಲಾಗಿದೆ ಎಂದರು.

ತೆರಿಗೆ ಹಂಚಿಕೆ ವೈಜ್ಞಾನಿಕವಾಗಿ ಆಗಬೇಕು ಕೇರಳ, ತಮಿಳುನಾಡಿಗೂ ನಮ್ಮಷ್ಟೇ ನಷ್ಟವಾಗಿದ್ದರೂ, ಅವರಿಗೆ ರಾಜಸ್ವ ಕೊರತೆ ಅನುದಾನವನ್ನು ನೀಡಲಾಗಿದೆ. ನಮಗೇಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಲಾಗಿದೆ. ಜನಸಂಖ್ಯೆ ಆಧಾರದ ಮೇಲೆ ಅನುದಾನ ಹಂಚಿಕೆ ಮಾಡಬಾರದು ಎಂದು ನಾವು ಹೇಳುವುದಿಲ್ಲ. ಆದರೆ ತೆರಿಗೆ ಹಂಚಿಕೆ ವೈಜ್ಞಾನಿಕವಾಗಿ ಮಾಡಬೇಕು ಎಂದು ಕೋರಲಾಗಿದೆ ಎಂದರು.

ಈ ಬಗ್ಗೆ ಇತರೆ ರಾಜ್ಯಗಳು ಧ್ವನಿ ಎತ್ತಿವೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು. ಸಭೆಯು ಒಂದೂ ಕಾಲ ಗಂಟೆಗಳ ಕಾಲ ಸೌಹಾರ್ದಯುತವಾಗಿ ನಡೆದಿದ್ದು, ಆಯೋಗದ ಅಧ್ಯಕ್ಷರು ನಮ್ಮ ಸಲಹೆಗಳನ್ನು ಸ್ವೀಕರಿಸಿದ್ದಾರೆ ಎಂದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ , ಮುಖ್ಯಮಂತ್ರಿಗಳ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here