ಬೆಂಗಳೂರು : ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಚಿನ್ನಾಭರಣಗಳನ್ನು ತಮಿಳುನಾಡು ಸರಕಾರಕ್ಕೆ ಹಸ್ತಾಂತರಿಸಲು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ದಿನ ನಿಗದಿ ಪಡಿಸಿದೆ.
ಆರ್ಟಿಐ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನಗರದ 36ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು, 2024ರ ಮಾರ್ಚ್ 6 ಮತ್ತು 7ರಂದು ದಿನಾಂಕವನ್ನು ನಿಗದಿಪಡಿಸಿದೆ. ಆ ಎರಡು ದಿನಗಳಂದು ಇತರೆ ಪ್ರಕರಣಗಳ ವಿಚಾರಣೆ ನಡೆಸದಂತೆ ನಿರ್ಧರಿಸಿದೆ.
ಅಲ್ಲದೆ, ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲು ಅಧಿಕೃತ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿದ್ದು, ತಮಿಳುನಾಡು ಸರಕಾರದ ಗೃಹ ಇಲಾಖೆಯ ಪ್ರದಾನ ಕಾರ್ಯದರ್ಶಿ, ತಮಿಳುನಾಡು ಐಜಿಪಿ ಅವರೊಂದಿಗೆ ಬರಬೇಕು. ಈ ವೇಳೆ ಛಾಯಾಗ್ರಾಹಕ, ವಿಡಿಯೋಗ್ರಾಫರ್ ಮತ್ತು ಆರು ದೊಡ್ಡ ಪೆಟ್ಟಿಗೆ(ಟ್ರಂಕ್) ಜೊತೆಗೆ ಅಗತ್ಯ ಭದ್ರತೆಯೊಂದಿಗೆ ಬಂದು ಚಿನ್ನಾಭರಣಗಳನ್ನು ಪಡೆದುಕೊಳ್ಳಬೇಕು. ಈ ಅಂಶವನ್ನು ತಮಿಳುನಾಡು ಡಿವೈಎಸ್ಪಿ ಅವರು ತಮಿಳುನಾಡು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.
ಅಲ್ಲದೆ, ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾಲಯದಲ್ಲಿ ಎರಡು ದಿನಗಳ ಕಾಲ ಅಗತ್ಯವಿರುವ ಭದ್ರತೆಯನ್ನು ಸ್ಥಳೀಯ ಪೊಲೀಸರಿಂದ ಕಲ್ಪಿಸಲು ನ್ಯಾಯಾಲಯದ ರಿಜಿಸ್ಟ್ರಾರ್ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು 2024ರ ಮಾರ್ಚ್ 6ಕ್ಕೆ ಮುಂದೂಡಿದೆ.
5 ಕೋಟಿ ಡಿಡಿ ನೀಡಿದ ತಮಿಳುನಾಡು : ಪ್ರಕರಣದ ವಿಚಾರಣೆಗಾಗಿ ಕರ್ನಾಟಕ ಸರಕಾರ ವೆಚ್ಚ ಮಾಡಿದ್ದ 5 ಕೋಟಿ ರೂ.ಗಳ ಡಿಡಿಯನ್ನು ತಮಿಳುನಾಡು ಸರಕಾರವು ಕರ್ನಾಟಕ ಸರಕಾರಕ್ಕೆ ನೀಡಿದೆ. ಡಿಡಿಯ ಮೊತ್ತವು ಇನ್ನೂ ರಾಜ್ಯ ಸರಕಾರದ ಖಾತೆಗೆ ಬರುವ ಪ್ರಕ್ರಿಯೆ ನಡೆಯುತ್ತಿದೆ ಎಂದಿದೆ.
ಏನೆಲ್ಲಾ ವಸ್ತುಗಳಿವೆ?
7040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿ.ವಿ. ಸೆಟ್ , 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೇಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರು. ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.