Anand Singh resigned from post of chairman of BDCC Bank
ವಿಜಯನಗರ:
ಪ್ರತಿಷ್ಠಿತ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ.
ರಾಜೀನಾಮೆಗೆ ವೈಯಕ್ತಿಕ ಕಾರಣ ನೀಡಿರುವ ಆನಂದ್ ಸಿಂಗ್ ಅವರು, ಜುಲೈ 1ರಿಂದಲೇ ಅನ್ವಯ ಆಗುವಂತೆ ರಾಜೀನಾಮೆ ನೀಡಿದ್ದಾರೆ.
ಗ್ರಾಮೀಣ ಭಾಗದ ರೈತರ ಅನುಕೂಲಕ್ಕೆ ಸ್ಥಾಪಿಸಿರುವ ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ಪ್ರತಿಷ್ಠಿತ ಈ ಸಹಕಾರಿ ಬ್ಯಾಂಕ್ 100 ವರ್ಷದ ಇತಿಹಾಸ ಹೊಂದಿದೆ.
ಆನಂದ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ವಿಜಯನಗರವನ್ನು ನೂತನ ಜಿಲ್ಲೆಯನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದರೆ, ವಿಜಯನಗರ ಜಿಲ್ಲೆಯಾಗಿ ರಚನೆಯಾದ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆನಂದ್ ಸಿಂಗ್ ತಮ್ಮ ಪುತ್ರ ಸಿದ್ಧಾರ್ಥ್ ಸಿಂಗ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿದ್ದರು. ಸಿದ್ಧಾರ್ಥ್ ಸೋಲು ಕಂಡಿದ್ದಾರೆ. ಇದರಿಂದ ಆನಂದ್ ಸಿಂಗ್ಗೆ ತೀವ್ರ ಮುಖಭಂಗವಾದಂತಾಗಿದೆ. ಇದರ ಬೆನ್ನಲ್ಲೇ ಇದೀಗ ಆನಂದ್ ಸಿಂಗ್ ಪ್ರತಿಷ್ಠಿತ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
