ಹಲ್ಲೆ ಪ್ರಕರಣ: ಮಾಜಿ ಸಚಿವ ಮುರುಗೇಶ ನಿರಾಣಿ ವಿರುದ್ಧ ಎಫ್ಐಆರ್ ದಾಖಲು
ಬಾಗಲಕೋಟೆ:
ರೈತ ಮುಖಂಡ ಯಲ್ಲಪ್ಪ ಹೆಗಡೆ ಎಂಬುವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಅವರ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಬಾಗಲಕೋಟೆಯ ಮುಧೋಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಅವರು ನೀಡಿರುವ ದೂರು ಆಧರಿಸಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಇಂಗಳಗಿ ಕ್ರಾಸ್ ಬಳಿ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು.
ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ಯಲ್ಲಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದು, ನಿರಾಣಿ ಸಹೋದರರ ಆರು ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ಯಲ್ಲಪ್ಪ ಹೆಗಡೆ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
