ಬೆಂಗಳೂರು: ಏ. 03: ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂಗಾರು ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂಗಾರು ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ತಪ್ಪಿಸುವ ಸಲುವಾಗಿ ಇಂದು ಪಾಲಿಕೆ ಕೇಂದ್ರ ಕಛೇರಿಯ ನೌಕರರ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಗಾರು ಮಳೆ ಪ್ರಾರಂಭವಾಗುತ್ತಿದ್ದು, ಎಲ್ಲಾ ಅಧಿಕಾರಿಗಳು ವಿಪತ್ತು ನಿರ್ವಹಣೆ ಕಾಯ್ದೆಯಡಿ ಅಗತ್ಯ ಕ್ರಮಗಳನ್ನು ಕೈಗೊಂಡು ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.
ಕಳೆದ ಬಾರಿಯ ಮಳೆಗಾಲದಲ್ಲಿ ಹೆಚ್ಚು ಸಮಸ್ಯೆಯಾಗಿದ್ದ ಪ್ರದೇಶಗಳಲ್ಲಿ ಈ ಬಾರಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅದರಂತೆ, ಸಾಯಿ ಲೇಔಟ್, ಪೈ ಲೇಔಟ್, ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್, ಕೋಗಿಲು ಕ್ರಾಸ್, ಸರ್ಜಾಪುರ ರಸ್ತೆ (ಇಬ್ಬಲೂರು ಜಂಕ್ಷನ್), ಅಬ್ಬಿಗೆರೆ ಕೆರೆ ಕೋಡಿ, ಮೈಸೂರು ರಸ್ತೆ, ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಮಳೆಗಾಲ ಪ್ರಾರಂಭಕ್ಕೂ ಮುನ್ನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ: ನಗರದಲ್ಲಿ 198 ಪ್ರವಾಹ ಪೀಡಿತ ಪ್ರದೇಶಗಳ ಜೊತೆಗೆ ಹೊಸದಾಗಿ 11 ಪ್ರದೇಶಗಳು ಸೇರಿದಂತೆ ಒಟ್ಟು 209 ಪ್ರವಾಹ ಪೀಡಿದ ಪ್ರದೇಶಗಳಿವೆ. ಈ ಸಂಬಂಧ ಈಗಾಗಲೇ 166 ಸ್ಥಳಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಾಕಿ 43 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಅಧಿಕಾರಿಗಳು ಖುದ್ದು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಿದರು.
ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಿ: ಪಾಲಿಕೆ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ 180 ಕಡೆ ನೀರು ನಿಲ್ಲುವ ಸ್ಥಳಗಳನ್ನು ಸಂಚಾರಿ ಪೊಲೀಸ್ ವಿಭಾಗವು ಗುರುತಿಸಿದ್ದು, ಈ ಪೈಕಿ ಸಂಬಂಧಪಟ್ಟ ಇಂಜಿನಿಯರ್ಗಳು ಸಂಚಾರಿ ಪೊಲೀಸ್ ವಿಭಾಗ ನೀಡಿರುವ ಪಟ್ಟಿ ಅನುಸಾರ ಸ್ಥಳ ಪರಿಶೀಲನೆ ನಡೆಸಿ ನೀರು ನಿಲ್ಲದಂತೆ ಸೂಕ್ತ ಕ್ರಮ ವಹಿಸಬೇಕು. ಜೊತೆಗೆ ರಸ್ತೆ ಬದಿ ಅಳವಡಿಸಿರುವಂತಹ ಗ್ರೇಟಿಂಗ್ಸ್ ಗಳ ಬಳಿ ತ್ಯಾಜ್ಯವನ್ನು ಸ್ವಚ್ಛಗೊಳಿಸಿ ಸೈಡ್ ಡ್ರೈನ್ಗಳಿಗೆ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
ವಿಪತ್ತು ನಿರ್ವಹಣೆಯಡಿ ಕಾರ್ಯನಿರ್ವಹಿಸಿ: ಪಾಲಿಕೆ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ವಲಯ ಆಯುಕ್ತರನ್ನು ಭೇಟಿ ಮಾಡಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ವಿಪತ್ತು ನಿರ್ವಹಣೆಗಾಗಿ ಈಗಾಗಲೇ ಕಾರ್ಯಸೂಚಿ (ಎಸ್.ಒ ಪಿ) ಯನ್ನು ಸಿದ್ದಪಡಿಸಲಾಗಿದ್ದು, ಅದರಂತೆಯೇ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಿಯಂತ್ರಣ ಕೊಠಡಿಗೆ ಅಧಿಕಾರಿಗಳ ನಿಯೋಜನೆ: ಮಳೆಗಾಲ ಪ್ರಾರಂಭವಾಗುವುದಕ್ಕೂ ಮುನ್ನ ಬಿಬಿಎಂಪಿಯ ನಿಯಂತ್ರಣ ಕೊಠಡಿಗಳಿಗೆ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳನ್ನು ನಿಯೋಜಿಸಬೇಕು. ಈ ಸಂಬಂಧ ಕೂಡಲೆ ಇಲಾಖಾವಾರು ಅಧಿಕಾರಿಗಳ ಪಟ್ಟಿ ಸಿದ್ಧಪಡಿಸಬೇಕು. ಅದರ ಜೊತೆಗೆ ಎಸ್.ಡಿ.ಆರ್.ಎಫ್/ಎನ್.ಡಿ.ಆರ್.ಎಫ್ ಅಧಿಕಾರಿಗಳ ಪಟ್ಟಿ ಸಿದ್ದಪಡಿಸಬೇಕು. ನಿಯಂತ್ರಣ ಕೊಠಡಿಗಳಲ್ಲಿ ಮಳೆಗಾಲಕ್ಕೆ ಅಗತ್ಯವಿರುವ ಎಲ್ಲಾ ಉಪಕರಗಳನ್ನು ಶೇಖರಿಸಿಟ್ಟುಕೊಂಡಿರಲು ಸೂಚಿಸಿದರು.
ಅಗ್ನಿ ಶಾಮಕ ಠಾಣೆಗಳ ಜೊತೆ ಸಂಪರ್ಕದಲ್ಲಿರಿ: ಪಾಲಿಕೆ ವ್ಯಾಪ್ತಿಯಲ್ಲಿ 20 ಅಗ್ನಿ ಶಾಮಕ ಠಾಣೆಗಳು ಹಾಗೂ ಎಸ್.ಡಿ.ಆರ್.ಎಫ್ ನ 1 ಕಂಪನಿ ಇದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಅಗ್ನಿ ಶಾಮಕ ಠಾಣೆಗಳ ಜೊತೆ ವಲಯ ಆಯುಕ್ತರು ಸದಾ ಸಂಪರ್ಕದಲ್ಲಿರಬೇಕು. ಜೊತೆಗೆ ಅಗ್ನಿ ಶಾಮಕ ಠಾಣೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ/ಸಿಬ್ಬಂದಿಗಳ ಪಟ್ಟಿಯನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದರು. ಅದಲ್ಲದೆ ಜಲಮಂಡಳಿಯ ಸೂಪರ್ ಸಕ್ಕರ್ ಹಾಗೂ ಜಟ್ಟಿಂಗ್ ಯಂತ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಪಟ್ಟಿಯನ್ನು ಕೂಡಾ ಪಡೆಯಲು ಸೂಚಿಸಿದರು.
ರಾಜಕಾಲುವೆಗಳಲ್ಲಿ ಹೂಳೆತ್ತಲು ಸೂಚನೆ: ರಾಜಕಾಲುವೆಗಳಲ್ಲಿ ಜೆ.ಸಿ.ಬಿ. ಗಳ ಮೂಲಕ ನಿರಂತರವಾಗಿ ಹೂಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಬೇಕು. ರಾಜಕಾಲುವೆಗಳಲ್ಲಿ ಸ್ವಚ್ಚತೆ ಮಾಡಲು 2 ತಿಂಗಳ ಯೋಜನೆ ರೂಪಿಸಿ ಪಟ್ಟಿಯನ್ನು ನೀಡಬೇಕು. ಮಳೆ ನೀರು ಎಲ್ಲಾ ಕಡೆ ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಎಲ್ಲಿಯೂ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕೆಂದು ಸೂಚಿಸಿದರು.
ಮರ, ರೆಂಬೆ-ಕೊಂಬೆ ತೆರವಿಗೆ ಕ್ರಮವಹಿಸಿ: ನಗರದಲ್ಲಿ ಮಳೆಯಿಂದಾಗಿ ಧರೆಗುರುಳುವ ಮರ, ಮರದ ರೆಂಬೆ-ಕೊಂಬೆಗಳನ್ನು ತೆರವುಗೊಳಿಸುವ 30 ತಂಡಗಳಿದ್ದು, ಎಲ್ಲಾ ತಂಡಗಳು ಕಾರ್ಯಪ್ರವೃತ್ತರಾಗಿ ಕಾರ್ಯನಿರ್ವಹಿಸಬೇಕು. ನಾಗರಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಲು ಸೂಚಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ರಮ್ಯಾ, ರಮೇಶ್, ಕರೀಗೌಡ, ಸ್ನೇಹಲ್, ದಿಗ್ವಿಜಯ್ ಬೋಡ್ಕೆ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಮುಖ್ಯ ಅಭಿಯಂತರರು, ಜಲಮಂಡಳಿ, ಬೆಸ್ಕಾಂ, ಮೆಟ್ರೋ, ಅಗ್ನಿಶಾಮಕ, ಸಂಚಾರಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.