
BBMP contractors bill payment: Why didn't Bommai pay contractor's bill when he was CM: DCM D.K. Shivakumar Questions
ಬೆಂಗಳೂರು:
“ಗುತ್ತಿಗೆದಾರರ ಬಿಲ್ ವಿಚಾರವಾಗಿ ಬೊಮ್ಮಾಯಿ, ಅಶೋಕ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ಗುತ್ತಿಗೆದಾರರ ಬಿಲ್ ಪಾವತಿ ಮಾಡಲಿಲ್ಲ ಯಾಕೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು;”ಬೊಮ್ಮಾಯಿ ಅವರಿಗಾಗಲಿ, ಅಶೋಕ್ ಅವರಿಗಾಗಲಿ ಅವರ ಸರ್ಕಾರದಲ್ಲಿ ಗುತ್ತಿಗೆದಾರರ ಬಿಲ್ ಪಾವತಿ ಮಾಡಲು ಯಾರು ಅಡ್ಡಿ ಮಾಡಿದ್ದರು? ಅವರ ಬಳಿ ಹಣ ಇರಲಿಲ್ಲವೇ? ಕೆಲಸ ಸರಿ ಇರಲಿಲ್ಲವೇ? ಈ ಪ್ರಶ್ನೆಗೆ ಬಿಜೆಪಿ ನಾಯಕರು ಮೊದಲು ಉತ್ತರ ನೀಡಲಿ. ಉಳಿದಂತೆ ಗುತ್ತಿಗೆದಾರರಿಗೆ ನಾನು ಉತ್ತರ ನೀಡುತ್ತೇನೆ.”
ನಮ್ಮ ಸರ್ಕಾರ ಬಂದ ನಂತರ ಮುಖ್ಯಮಂತ್ರಿಗಳು, ಕೆಂಪಣ್ಣ ಅವರ ದೂರಿನ ಆಧಾರದ ಮೇಲೆ ಕೆಲಸ ಆಗಿದೆಯೇ ಇಲ್ಲವೇ ಎಂದು ನೈಜತೆ ಪರಿಶೀಲನೆ ಮಾಡಿ ಎಂದು ತಿಳಿಸಿದರು.
ಇನ್ನು ಬಿಜೆಪಿ ನಾಯಕರು ಕೂಡ ಸದನದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ತನಿಖೆ ಮಾಡಿ ಎಂದು ನಮ್ರತೆಯಿಂದ ಮನವಿ ಮಾಡಿದ್ದರು. ಹೀಗಾಗಿ ನಾವು ತನಿಖಾ ಸಮಿತಿ ರಚನೆ ಮಾಡಿದ್ದೇವೆ. ಕಾಮಗಾರಿಗಳ ಕೆಲಸ ಆಗಿದೆಯೇ ಇಲ್ಲವೇ ಎಂದು ಪರಿಶೀಲನೆ ಮಾಡಲು ಸಮಿತಿಗೆ ಸೂಚಿಸಿದ್ದೇವೆ.
ಮೂರ್ನಾಲ್ಕು ವರ್ಷಗಳಿಂದ ಬಿಲ್ ಪಾವತಿ ಆಗದಿದ್ದಾಗ ಸುಮ್ಮನಿದ್ದವರು, ಈಗ ತನಿಖೆ ಮುಗಿಯುವವರೆಗೂ ಕಾಯಲು ಯಾಕೆ ಸಿದ್ಧರಿಲ್ಲ? ಯಾಕೆ ಈ ಪರಿಯ ಆತುರ? ಏನಿದರ ಹಿಂದಿನ ಮರ್ಮ?
ಇನ್ನು 10-15% ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಈ ಕಮಿಷನ್ ಯಾರು ಕೇಳಿದ್ದಾರೆ? ಡಿ.ಕೆ. ಶಿವಕುಮಾರ್ ಕೇಳಿದ್ದಾನಾ? ಸಿದ್ದರಾಮಯ್ಯ ಕೇಳಿದ್ದಾರಾ? ಮಂತ್ರಿಗಳು, ಶಾಸಕರು ಕೇಳಿದ್ದಾರಾ? ಅಧಿಕಾರಿಗಳು ಕೇಳಿದ್ದಾರಾ? ಎಂದು ಹೇಳಲಿ.