ಬೆಂಗಳೂರು: ಖಾಸಗಿ ಕಂಪೆನಿಯ ಅತಿಯಾದ ಕೆಲಸದ ಒತ್ತಡಕ್ಕೆ ಬೇಸತ್ತು ಇಂಜಿನಿಯರ್ ಆತ್ಮಹತ್ಯೆ ಮಾಡಿರುವ ಘಟನೆ ಇಲ್ಲಿನ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಮಹಾರಾಷ್ಟ್ರ ಮೂಲದ ನಿಖಿಲ್ ಸೋಮವಂಶಿ(25) ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ ಎಂದು ಗುರುತಿಸಲಾಗಿದ್ದು, ಸೋಮವಂಶಿ ಮೃತದೇಹವು ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಆಗರ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ.
ಘಟನೆ ಸಂಬಂಧ ಎಚ್ಎಸ್ಆರ್ ಲೇಔಟ್ ಠಾಣಾ ಪೊಲೀಸಲು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆದಿದ್ದು, ಮೃತದೇಹವನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ನಿಖಿಲ್ ಸೋಮವಂಶಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಆದರೆ, ನಿಖಿಲ್ ಆತ್ಮಹತ್ಯೆ ಮಾಡಿಕೊಂಡ ನಂತರ, ಅವರ ಸಹೋದ್ಯೋಗಿಗಳು ಕೆಲಸದ ಒತ್ತಡವೇ ಕಾರಣ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ನಿಖಿಲ್ ಅವರ ಕಂಪೆನಿಯ ವ್ಯವಸ್ಥಾಪಕರು ನೀಡುತ್ತಿದ್ದ ಕೆಲಸ ಹೊರೆ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿದ್ದಾರೆ. ನಿಖರವಾಗಿ ಹೇಳಲು ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಐಐಎಸ್ಸಿ ಪದವೀಧರರಾದ ನಿಖಿಲ್ ಸೋಮವಂಶಿ ಕೋರಮಂಗಲದ ಎಐ ಸಂಸ್ಥೆಯಲ್ಲಿ ಮೆಷಿನ್ ಲರ್ನಿಂಗ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.