ಬೆಂಗಳೂರು : ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಪರಾರಿಯಾಗಿರುವ ಘಟನೆ ರವಿವಾರ ವರದಿಯಾಗಿದೆ.
ಚಂದ್ರಶೇಖರ್ ಎಂಬ ವಿಚಾರಣಾಧೀನ ಕೈದಿಯು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮೇ 2ರಂದು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ವಿಚಾರಣಾ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ ಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು ಎನ್ನಲಾಗಿದೆ.
ಮೇ 4ರ ರವಿವಾರ ಮುಂಜಾನೆ 5:30ರ ಸುಮಾರಿಗೆ ಪೊಲೀಸರ ಕಣ್ಣು ತಪ್ಪಿಸಿ ಚಂದ್ರಶೇಖರ್ ಆಸ್ಪತ್ರೆಯಿಂದ ಪರಾರಿಯಾಗಿದ್ದು, ಆತ ದರೋಡೆ ಪ್ರಕರಣದಲ್ಲಿ ಜೈಲು ಸೇರಿದ್ದ. ಇನ್ನು, ಆಸ್ಪತ್ರೆಗೆ ನಗರದ ವಿ.ವಿ.ಪುರಂ ಠಾಣೆಯ ಪೊಲೀಸರು ಹಾಗೂ ಜೈಲಿನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಶೋಧ ಕಾರ್ಯ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.